12
ಕಪಟತನದ ಬಗ್ಗೆ ಎಚ್ಚರಿಕೆ
ಮತ್ತಾ 10:26-31
ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ. ಮರೆಯಾಗಿರುವಂಥದ್ದು ವ್ಯಕ್ತವಾಗುವುದು. ರಹಸ್ಯವಾಗಿರುವಂಥದ್ದು ಪ್ರಕಟವಾಗುವುದು. ಹೀಗಿರುವುದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವುದು. ಮತ್ತು ನೀವು ಕೋಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.
“ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ. ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ. ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.
ಬಹಿರಂಗವಾಗಿ ಕ್ರಿಸ್ತನ ಸಾಕ್ಷಿಯಾಗಿ ಜೀವಿಸುವುದು
ಮತ್ತಾ 10:32-33; 12:32; 10:19,20
“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು. ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು. 10  ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ. 11  ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ. 12  ಏಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು” ಅಂದನು.
ಬುದ್ಧಿಯಿಲ್ಲದ ಐಶ್ವರ್ಯವಂತನ ಸಾಮ್ಯ
13 ಆಗ ಜನರಲ್ಲಿ ಒಬ್ಬನು, “ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು” ಎಂದು ಯೇಸುವನ್ನು ಕೇಳಿಕೊಳ್ಳಲು, 14 ಅದಕ್ಕೆ ಯೇಸು, “ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?” ಎಂದು ಅವನನ್ನು ಕೇಳಿ, 15 ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.
16 ಅದೇನೆಂದರೆ “ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು. 17  ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?’ ಎಂದು ಆಲೋಚಿಸಿ, 18  ‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು, 19  ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು.
20  “ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು. 21  ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ” ಅಂದನು.
ದೇವರಲ್ಲಿ ಭರವಸೆ
ಮತ್ತಾ 6:25-34
22 ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ. 23  ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದು. 24  ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ. 25  ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಒಂದು ಮೊಳದಷ್ಟು ಹೆಚ್ಚಿಸಲು*ನಿಮ್ಮಲ್ಲಿ ಯಾರಿಂದಾದೀತು? 26  ಇಂಥ ಅಲ್ಪ ಕಾರ್ಯಗಳನ್ನು ಮಾಡಲು ನೀವು ಆಸಕ್ತರಾಗಿರಲಾಗಿ ಉಳಿದ ವಿಷಯದಲ್ಲಿ ಚಿಂತೆಮಾಡುವುದೇಕೆ? 27  ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಅಡವಿಯ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ. 28  ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು. 29  ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ. 30  ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ. 31  ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು. 32  ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ. 33  ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ. 34  ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುತ್ತದಷ್ಟೆ.
ಎಚ್ಚರಿಕೆಯುಳ್ಳ ಆಳುಗಳು
ಮತ್ತಾ 24:45-51
35  “ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ. 36  ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ. 37  ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 38  ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಆಳುಗಳು ಧನ್ಯರು. 39  ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ. 40  ಅದುದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ” ಅಂದನು.
41 ಆಗ ಪೇತ್ರನು, “ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತಿದ್ದೀಯೋ ಅಥವಾ ಎಲ್ಲರಿಗೋ?” ಎಂದು ಕೇಳಲು,
42 ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು? 43  ಯಜಮಾನನು ಬಂದು ಯಾವ ಆಳು ಹೀಗೆ ಮಾಡುವುದನ್ನು ಕಾಣುವನೋ ಆ ಆಳು ಧನ್ಯನು. 44  ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 45  ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ, 46  ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು. 47  ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು. 48  ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.
ಯೇಸುವಿನ ನಿಮಿತ್ತ ವಿಭಜನೆಗಳು
ಮತ್ತಾ 10:34-36
49  “ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕಬೇಕೆಂದು ಬಂದೆನು. ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ. 50  ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ. 51  ನಾನು ಭೂಮಿಯಲ್ಲಿ ಸಮಾಧಾನವನ್ನುಂಟು ಮಾಡುವುದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭಿನ್ನಭೇದಗಳನ್ನು ಉಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ. 52  ಹೇಗೆಂದರೆ, ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರೂ ಏಳುವರು. 53  ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು. ಅತ್ತೆಗೆ ವಿರೋಧವಾಗಿ ಸೊಸೆಯು ಪರಸ್ಪರ ಭಿನ್ನಭೇದವುಳ್ಳವರಾಗಿ ವಿಂಗಡಿಸಿ ಹೋಗುವರು” ಅಂದನು.
ಕಾಲದ ಅರ್ಥೈಸುವಿಕೆ
ಮತ್ತಾ 16:2,3
54 ಇದಲ್ಲದೆ ಯೇಸು ಜನಸಮೂಹಕ್ಕೆ ಹೇಳಿದ್ದೇನಂದರೆ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ, ಹಾಗೆಯೇ ಆಗುತ್ತದೆ. 55  ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ. 56  ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ?
ಪ್ರತಿವಾದಿಯೊಂದಿಗೆ ಸಂಧಾನ
ಮತ್ತಾ 5:25,26
57  “ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ? 58  ನೀನು ಪ್ರತಿವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು. 59  ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಅಂದನು.
* 12:25 12:25 ಜೀವನಾವಧಿಯನ್ನು ಒಂದು ಮೊಳದಷ್ಟು ಹೆಚ್ಚಿಸಲು ಅಥವಾ ಚಿಂತೆಮಾಡಿ ಮಾಡಿ ಒಂದು ಮೊಳ ಉದ್ದ ಬೆಳೆಯುವುದು.