26
ಅಧಿಕಾರಸ್ಥರು ಯೇಸುವನ್ನು ಕೊಲ್ಲಬೇಕೆಂದು ಆಲೋಚಿಸಿದ್ದು
ಮಾರ್ಕ 14:1-11; ಲೂಕ 22:1-6; ಯೋಹಾ 12:1-8
ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ, “ಎರಡು ದಿನಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ನೀವು ಬಲ್ಲಿರಿ; ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು” ಎಂದು ಹೇಳಿದನು.
ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು ಯೇಸುವನ್ನು ಗುಟ್ಟಾಗಿ ಹಿಡಿದು ಕೊಲ್ಲಬೇಕೆಂಬುದಾಗಿ ಒಳಸಂಚು ಮಾಡಿದರು. “ಆದರೂ ಹಬ್ಬದಲ್ಲಿ* ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು” ಎಂದು ಮಾತನಾಡಿಕೊಂಡರು.
ಸ್ತ್ರೀಯು ಬೆಲೆಯುಳ್ಳ ತೈಲವನ್ನು ಆತನ ಮೇಲೆ ಹೊಯ್ಯಿದದ್ದು
ಯೇಸು ಬೇಥಾನ್ಯದಲ್ಲಿ ಸೀಮೋನನೆಂಬ ಕುಷ್ಠರೋಗಿಯ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆ ತೈಲವನ್ನು ಆತನ ತಲೆಯ ಮೇಲೆ ಸುರಿದಳು. ಶಿಷ್ಯರು ಇದನ್ನು ಕಂಡು ಕೋಪಗೊಂಡು, “ಹೀಗೆ ವ್ಯರ್ಥವಾಗಿ ಖರ್ಚುಮಾಡುವುದೇಕೆ? ಈ ತೈಲವನ್ನು ಬಹಳ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ” ಅಂದರು. 10 ಯೇಸು ಅದನ್ನು ತಿಳಿದು ಅವರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತಿದ್ದೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ. 11  ಬಡವರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರಲ್ಲಾ, ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ. 12  ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದು ನನ್ನ ಉತ್ತರಕ್ರಿಯೆಗಾಗಿಯೇ. 13  ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ” ಹೇಳುವರು.
ಇಸ್ಕರಿಯೋತನು ಯೇಸುವನ್ನು ಹಿಡಿದುಕೊಡಲು ಒಪ್ಪಿಕೊಂಡದ್ದು
14 ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬುವವನು ಮುಖ್ಯಯಾಜಕರ ಬಳಿಗೆ ಹೋಗಿ, 15 “ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು. 16 ಅಂದಿನಿಂದ ಅವನು ಆತನನ್ನು ಹಿಡಿದುಕೊಡುವುದಕ್ಕಾಗಿ ಸಂದರ್ಭ ಹುಡುಕುತ್ತಿದ್ದನು.
ಯೇಸು ತನ್ನ ಶಿಷ್ಯರ ಸಂಗಡ ಕಡೆ ಭೋಜನ ಮಾಡಿದ್ದು
ಮಾರ್ಕ 14:12-31; ಲೂಕ 22:7-34; ಯೋಹಾ 13:21-26
17 ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪಸ್ಕದ ಊಟಮಾಡುವುದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕನ್ನುತ್ತೀ” ಎಂದು ಕೇಳಿದರು. 18 ಆತನು, “ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, ‘ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ’ ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ” ಅಂದನು. 19 ಶಿಷ್ಯರು ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿ ಪಸ್ಕದ ಭೋಜನವನ್ನು ತಯಾರಿಸಿದರು.
20 ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡನು. 21 ಅವರು ಊಟಮಾಡುತ್ತಿರುವಾಗ ಆತನು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು” ಅಂದನು. 22 ಆಗ ಅವರು ಬಹಳ ದುಃಖಪಟ್ಟು, “ಕರ್ತನೇ, ನಾನಲ್ಲವಲ್ಲಾ?” ಎಂದು ಪ್ರತಿಯೊಬ್ಬರು ಕೇಳತೊಡಗಿದರು. 23 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಬಟ್ಟಲಲ್ಲಿ ನನ್ನ ಸಂಗಡ ಕೈ ಅದ್ದಿದವನೇ ನನ್ನನ್ನು ಹಿಡಿದುಕೊಡುವವನು. 24  ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು. 25 ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ನಾನೋ?” ಎಂದು ಕೇಳಲು ಯೇಸು ಅವನಿಗೆ, “ನೀನೇ ಹಾಗೆ ಹೇಳಿದ್ದೀ” ಎಂದು ಹೇಳಿದನು. 26 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಅಂದನು. 27 ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು, “ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ; ಇದು ನನ್ನ ರಕ್ತ, 28  ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ. 29  ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ” ಅಂದನು. 30 ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು.
31 ಆಗ ಯೇಸು, ಅವರಿಗೆ, §“ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.” 32  “ಆದರೆ ನಾನು ಜೀವಿತನಾಗಿ ಎದ್ದ ಮೇಲೆ*ನಿಮಗಿಂತ ಮೊದಲೇ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು. 33 ಆದರೆ ಪೇತ್ರನು ಆತನಿಗೆ, “ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ” ಎಂದು ಉತ್ತರ ಕೊಟ್ಟನು. 34 ಯೇಸು ಪೇತ್ರನಿಗೆ, “ನಿನಗೆ ಸತ್ಯವಾಗಿ ಹೇಳುತ್ತೇನೆ, ಇದೇ ರಾತ್ರಿಯಲ್ಲಿ ಕೋಳಿ ಕೂಗುವುದಕ್ಕಿಂತ ಮೊದಲೇ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವಿ” ಅಂದನು. 35 ಪೇತ್ರನು ಆತನಿಗೆ, “ನಾನು ನಿನ್ನ ಸಂಗಡ ಸಾಯಬೇಕಾಗಿಬಂದರೂ ನಿನ್ನನ್ನು ನಿರಾಕರಿಸುವುದಿಲ್ಲ” ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು.
ಯೇಸು ಗೆತ್ಸೇಮನೆ ತೋಟದಲ್ಲಿ ಪ್ರಾರ್ಥಿಸಿದ್ದು
ಮಾರ್ಕ 14:32-50; ಲೂಕ 22:40-53; ಯೋಹಾ 18:1-12
36 ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, “ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ” ಎಂದು ಹೇಳಿ, 37 ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ಕರೆದುಕೊಂಡು ಮುಂದಕ್ಕೆ ಹೋಗಿ ದುಃಖಪಟ್ಟು ಮನಗುಂದಿದವನಾದನು. 38 ಮತ್ತು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ” ಎಂದು ಹೇಳಿದನು. 39 ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, “ನನ್ನ ತಂದೆಯೇ, ಸಾಧ್ಯವಾದರೆ ಈಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು. 40 ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, “ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ? 41  §ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ” ಎಂದು ಹೇಳಿದನು. 42 ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು. 43 ಆತನು ತಿರುಗಿ ಬಂದಾಗಲೂ ಅವರು ನಿದ್ದೆಮಾಡುವುದನ್ನು ಕಂಡನು; ಅವರ ಕಣ್ಣುಗಳು ಭಾರವಾಗಿದ್ದವು. 44 ಅನಂತರ ಮತ್ತೆ ಅವರನ್ನು ಬಿಟ್ಟು ಹೊರಟುಹೋಗಿ ತಿರುಗಿ ಅದೇ ಮಾತುಗಳನ್ನು ಹೇಳುತ್ತಾ ಮೂರನೆಯ ಸಾರಿಯೂ ಪ್ರಾರ್ಥಿಸಿದನು. 45 ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, “ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ. 46  ಏಳಿರಿ, ಹೋಗೋಣ; ನನ್ನನ್ನು ಹಿಡಿದುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು.
ಶತ್ರುಗಳು ಯೇಸುವನ್ನು ಹಿಡಿದದ್ದು
47 ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು. 48 ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿಯಿರಿ” ಎಂದು ಮುನ್ಸೂಚನೆ ನೀಡಿದ್ದನು. 49 ಕೂಡಲೇ ಅವನು ಯೇಸುವಿನ ಬಳಿಗೆ ಬಂದು, “ಗುರುವೇ ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು. 50 ಯೇಸು ಅವನಿಗೆ, “ಗೆಳೆಯನೇ, ನೀನು ಯಾಕೆ ಬಂದಿರುವೇ” ಎಂದು ಹೇಳಿದನು. ಅವರು ಹತ್ತಿರಕ್ಕೆ ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು. 51 ಇಗೋ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು. 52 ಆಗ ಯೇಸು ಅವನಿಗೆ, “ನಿನ್ನ ಕತ್ತಿಯನ್ನು ತಿರುಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರೂ ಕತ್ತಿಯಿಂದ ನಾಶವಾಗುವರು, 53  ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ? 54  ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ?” ಎಂದು ಹೇಳಿದನು. 55 ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, “ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ; 56  ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
ಹಿರೀಸಭೆಯವರು ಯೇಸುವನ್ನು ಮರಣದಂಡನೆಗೆ ತಕ್ಕವನೆಂದು ಪಿಲಾತನ ಬಳಿಗೆ ತೆಗೆದುಕೊಂಡು ಹೋದದ್ದು
ಮಾರ್ಕ 14:53-72; ಲೂಕ 22:54-71; ಯೋಹಾ 18:12-27
57 ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ಕರೆದುಕೊಂಡು ಹೋದರು, ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಒಟ್ಟಾಗಿ ಸೇರಿಬಂದಿದ್ದರು. 58 ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು. 59 ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ. 60 ಅನಂತರ ಇಬ್ಬರು ಮುಂದೆ ಬಂದು, 61 “ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು ‘ಈ ಮನುಷ್ಯನು ಹೇಳಿದನು’ ” ಅಂದರು; 62 ಆಗ ಮಹಾಯಾಜಕನು ಎದ್ದು ನಿಂತು, “ನೀನೇನೂ ಉತ್ತರಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಆರೋಪಗಳು ನಿಜವೇನು?” ಎಂದು ಆತನನ್ನು ಕೇಳಿದನು. ಆದರೆ ಯೇಸು ಸುಮ್ಮನಿದ್ದನು. 63 ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು. 64 ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ*ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು. 65 ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇವನು ದೇವದೂಷಣೆಯ ಮಾತನಾಡಿದ್ದಾನೆ; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ನೋಡಿ ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ; 66 ನಿಮಗೆ ಹೇಗೆ ತೋರುತ್ತದೆ?” ಅನ್ನಲು, “ಇವನು ಮರಣದಂಡನೆಗೆ ಯೋಗ್ಯನು” ಎಂದು ಅವರು ಉತ್ತರಕೊಟ್ಟರು. 67 ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು, 68 “ಕ್ರಿಸ್ತನೇ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದನೆ ಹೇಳು” ಅಂದರು.
ಪೇತ್ರನು ಯೇಸುವನ್ನು ಅರಿಯೆನೆಂದು ಹೇಳಿದ್ದು
69 ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು. ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು, “ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು” ಅಲ್ಲವೇ ಎನ್ನಲು. 70 ಅವನು ನಿರಾಕರಿಸಿ, “ನೀನು ಏನು ಹೇಳುತ್ತಿರುವೆ ನನಗೆ ಗೊತ್ತಿಲ್ಲ” ಎಂದು ಎಲ್ಲರ ಮುಂದೆ ಹೇಳಿದನು. 71 ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ, “ಇವನೂ ನಜರೇತಿನ ಯೇಸುವಿನ ಜೊತೆಯಲ್ಲಿ ಇದ್ದವನು” ಎಂದು ಹೇಳಿದಳು. 72 ಅವನು ತಿರುಗಿ ನಿರಾಕರಿಸಿ ಆಣೆಯಿಟ್ಟು, “ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. 73 ಸ್ವಲ್ಪ ಹೊತ್ತಿನ ನಂತರ ಅಲ್ಲಿ ನಿಂತಿದ್ದವರು ಮುಂದೆ ಬಂದು ಪೇತ್ರನಿಗೆ, “ನಿಶ್ಚಯವಾಗಿ ನೀನೂ ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು (ಗಲಿಲಾಯದವನೆಂದು) ತೋರಿಸಿಕೊಡುತ್ತದೆ” ಎಂದು ಹೇಳಲು 74 ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು. 75 ಪೇತ್ರನಿಗೆ ಯೇಸು, “ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸುವಿ” ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
* 26:5 26:5 ಪಸ್ಕ ಹಬ್ಬ 26:7 26:7 ಚಂದ್ರಕಾಂತಶಿಲೆಯ ಭರಣಿಯನ್ನು 26:28 26:28 ಹೊಸ ಒಡಂಬಡಿಕೆಯ § 26:31 26:31 ಜೆಕ. 13:7 * 26:32 26:32 ಮತ್ತಾ 28:7, 10, 16; ಮಾರ್ಕ 16:7 26:39 26:39 ಇಬ್ರಿ. 5:7 26:39 26:39 ಕಷ್ಟಾನುಭವ § 26:41 26:41 ಮಾರ್ಕ 13:33; ಕೊಲೊ 4:2 * 26:64 26:64 ಮತ್ತಾ 16:7; ಕೀರ್ತ 110:1