11
ಪೇತ್ರನು ಜೆರುಸಲೇಮಿಗೆ ಹಿಂತಿರುಗುವನು
ಯೆಹೂದ್ಯರಲ್ಲದವರು ಸಹ ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅಪೊಸ್ತಲರಿಗೂ ಜುದೇಯದ ಸಹೋದರರಿಗೂ ತಿಳಿಯಿತು. ಆದರೆ ಪೇತ್ರನು ಜೆರುಸಲೇಮಿಗೆ ಬಂದಾಗ ಕೆಲವು ಯೆಹೂದ್ಯ ವಿಶ್ವಾಸಿಗಳು* ಅವನೊಂದಿಗೆ ವಾದ ಮಾಡಿದರು. ಅವರು, “ಯೆಹೂದ್ಯರಲ್ಲದವರ ಮತ್ತು ಸುನ್ನತಿ ಮಾಡಿಸಿಕೊಂಡಿಲ್ಲದವರ ಮನೆಗಳಿಗೆ ನೀನು ಹೋದೆ! ನೀನು ಅವರೊಂದಿಗೆ ಊಟವನ್ನು ಸಹ ಮಾಡಿದೆ!” ಎಂದು ಹೇಳಿದರು.
ಆದ್ದರಿಂದ ಪೇತ್ರನು ನಡೆದ ಸಂಗತಿಯನ್ನೆಲ್ಲಾ ಅವರಿಗೆ ವಿವರಿಸಿದನು. ಪೇತ್ರನು ಅವರಿಗೆ, “ನಾನು ಜೊಪ್ಪ ಪಟ್ಟಣದಲ್ಲಿದ್ದೆನು. ನಾನು ಪ್ರಾರ್ಥಿಸುತ್ತಿದ್ದಾಗ ನನಗೊಂದು ದರ್ಶನವಾಯಿತು. ಆ ದರ್ಶನದಲ್ಲಿ, ಆಕಾಶದಿಂದ ಇಳಿದುಬರುತ್ತಿರುವ ಒಂದು ವಸ್ತುವನ್ನು ಕಂಡೆನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗವನ್ನು ಕಟ್ಟಿ ಭೂಮಿಗೆ ಇಳಿಯಬಿಡಲಾಗಿತ್ತು. ಅದು ಇಳಿದು ಬಂದು ನನ್ನ ಸಮೀಪದಲ್ಲೇ ನಿಂತುಕೊಂಡಿತು. ನಾನು ಅದರೊಳಗೆ ನೋಡಿದೆನು. ಅದರಲ್ಲಿ ಪಶುಗಳೂ ಕ್ರೂರಪ್ರಾಣಿಗಳೂ ಹರಿದಾಡುವ ಕ್ರಿಮಿಕೀಟಗಳೂ ಹಾರಾಡುವ ಪಕ್ಷಿಗಳೂ ಇದ್ದವು. ಆಗ, ‘ಪೇತ್ರನೇ, ಎದ್ದೇಳು! ಇವುಗಳಲ್ಲಿ ಯಾವುದನ್ನು ಬೇಕಾದರೂ ಕೊಯ್ದುತಿನ್ನು!’ ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು.
“ಆದರೆ ನಾನು, ‘ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದ ಮತ್ತು ಅಶುದ್ಧವಾದ ಏನನ್ನಾಗಲಿ ನಾನೆಂದೂ ತಿಂದಿಲ್ಲ’ ಎಂದು ಹೇಳಿದೆನು.
“ಆದರೆ, ‘ಇವುಗಳನ್ನು ದೇವರು ಶುದ್ಧೀಕರಿಸಿದ್ದಾನೆ. ಇವುಗಳನ್ನು ಅಶದ್ಧವೆಂದು ಹೇಳಬೇಡ!’ ಎಂದು ಆ ವಾಣಿಯು ನನಗೆ ಉತ್ತರಕೊಟ್ಟಿತು.
10 “ಹೀಗೆ ಮೂರು ಸಲವಾಯಿತು. ಬಳಿಕ ಆ ಇಡೀ ವಸ್ತುವನ್ನು ಆಕಾಶಕ್ಕೆ ಹಿಂತೆಗೆದುಕೊಳ್ಳಲಾಯಿತು. 11 ಅದೇ ಸಮಯದಲ್ಲಿ ನಾನಿದ್ದ ಮನೆಗೆ ಮೂರು ಮಂದಿ ಬಂದರು. ಈ ಮೂವರನ್ನು ಸೆಜರೇಯ ಪಟ್ಟಣದಿಂದ ಕಳುಹಿಸಲಾಗಿತ್ತು. 12 ಸಂದೇಹಪಡದೆ ಅವರೊಂದಿಗೆ ಹೋಗಬೇಕೆಂದು ಪವಿತ್ರಾತ್ಮನು ನನಗೆ ಹೇಳಿದನು. ಇಲ್ಲಿರುವ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು. ನಾವು ಕೊರ್ನೇಲಿಯನ ಮನೆಗೆ ಹೋದೆವು. 13 ತನ್ನ ಮನೆಯಲ್ಲಿ ದೇವದೂತನೊಬ್ಬನು ನಿಂತಿರುವುದನ್ನು ತಾನು ಕಂಡದ್ದರ ಬಗ್ಗೆ ಕೊರ್ನೇಲಿಯನು ನನಗೆ ಹೇಳಿದನು. ಆ ದೇವದೂತನು ಕೊರ್ನೇಲಿಯನಿಗೆ, ‘ಕೆಲವು ಜನರನ್ನು ಜೊಪ್ಪಕ್ಕೆ ಕಳುಹಿಸು. ಸೀಮೋನ್ ಪೇತ್ರನನ್ನು ಆಹ್ವಾನಿಸಿ ನಿಮ್ಮ ಬಳಿಗೆ ಬರಮಾಡಿಕೊ. 14 ಅವನು ನಿಮ್ಮೊಂದಿಗೆ ಮಾತಾಡುವನು. ಅವನು ಹೇಳುವ ಸಂಗತಿಗಳು ನಿನ್ನನ್ನೂ ನಿನ್ನ ಕುಟಂಬದವರನ್ನೂ ರಕ್ಷಿಸುತ್ತವೆ’ ಎಂದು ಹೇಳಿದನು.
15 “ನಾನು ನನ್ನ ಉಪದೇಶವನ್ನು ಆರಂಭಿಸಿದ ಮೇಲೆ, ಪ್ರಾರಂಭದಲ್ಲಿ ಪವಿತ್ರಾತ್ಮನು ನಮ್ಮ ಮೇಲೆ ಬಂದಂತೆ ಅವರ ಮೇಲೆಯೂ ಬಂದನು. 16 ಆಗ ನಾನು ಪ್ರಭುವಿನ ಮಾತುಗಳನ್ನು ಜ್ಞಾಪಿಸಿಕೊಂಡೆನು. ‘ಯೋಹಾನನು ಜನರಿಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ಆದರೆ ನೀವು ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಪಡೆಯುವಿರಿ!’ ಎಂದು ಪ್ರಭುವು ಹೇಳಿದ್ದನು. 17 ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರವನ್ನೇ ದೇವರು ಈ ಜನರಿಗೆ ಕೊಟ್ಟನು. ಹೀಗಿರಲು ನಾನು ದೇವರ ಕೆಲಸವನ್ನು ನಿಲ್ಲಿಸಲು ಸಾಧ್ಯವಿರಲಿಲ್ಲ” ಎಂದು ಹೇಳಿದನು.
18 ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.
ಅಂತಿಯೋಕ್ಯಕ್ಕೆ ಸುವಾರ್ತೆ
19 ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಈ ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು. 20 ಈ ವಿಶ್ವಾಸಿಗಳಲ್ಲಿ ಕೆಲವರು ಸೈಪ್ರಸ್ ಮತ್ತು ಸಿರೇನ್ ಸ್ಥಳಗಳವರಾಗಿದ್ದರು. ಈ ಜನರು ಅಂತಿಯೋಕ್ಯಕ್ಕೆ ಬಂದಾಗ ಅವರು, ಪ್ರಭುವಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅಲ್ಲಿಯ ಗ್ರೀಕ್ ಜನರಿಗೆ ತಿಳಿಸಿದರು. 21 ಪ್ರಭುವು ವಿಶ್ವಾಸಿಗಳಿಗೆ ಸಹಾಯ ಮಾಡುತ್ತಿದ್ದನು. ಜನರು ಬಹು ಸಂಖ್ಯೆಯಲ್ಲಿ ಪ್ರಭುವನ್ನು ನಂಬಿಕೊಂಡು ಅನುಸರಿಸತೊಡಗಿದರು.
22 ಅಂತಿಯೋಕ್ಯದಲ್ಲಿದ್ದ ಈ ಹೊಸ ವಿಶ್ವಾಸಿಗಳ ಬಗ್ಗೆ ಜೆರುಸಲೇಮಿನ ಸಭೆಯವರಿಗೆ ತಿಳಿಯಿತು. ಆದ್ದರಿಂದ ಜೆರುಸಲೇಮಿನ ವಿಶ್ವಾಸಿಗಳು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು. 23-24 ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.
25 ಬಳಿಕ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಸ್ ಪಟ್ಟಣಕ್ಕೆ ಹೋದನು. 26 ಬಾರ್ನಬನು ಅಲ್ಲಿ ಸೌಲನನ್ನು ಕಂಡುಕೊಂಡು ಅವನನ್ನು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಸೌಲನು ಮತ್ತು ಬಾರ್ನಬನು ಅಂತಿಯೋಕ್ಯದಲ್ಲಿ ಒಂದು ವರ್ಷ ಪೂರ್ತಿ ಸಭೆಯ ಅನ್ಯೋನ್ಯತೆಯಲ್ಲಿ ಇದ್ದುಕೊಂಡು ಅನೇಕ ಜನರಿಗೆ ಬೋಧಿಸಿದರು. ಯೇಸುವಿನ ಹಿಂಬಾಲಕರಿಗೆ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲೇ.
27 ಆ ಕಾಲದಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಹೋದರು. 28 ಈ ಪ್ರವಾದಿಗಳಲ್ಲಿ “ಅಗಬ” ಎಂಬ ಒಬ್ಬನಿದ್ದನು. ಅಗಬನು ಅಂತಿಯೋಕ್ಯದಲ್ಲಿ ಪವಿತ್ರಾತ್ಮನ ಪ್ರೇರಣೆಯಿಂದ, “ಇಡೀ ಪ್ರಪಂಚಕ್ಕೆ ಭೀಕರ ಕ್ಷಾಮ ಬರಲಿದೆ” ಎಂದು ಹೇಳಿದನು. (ಈ ಬರಗಾಲವು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ ಬಂದಿತು.) 29 ಜುದೇಯದಲ್ಲಿರುವ ಸಹೋದರ ಸಹೋದರಿಯರಿಗೆ ಸಹಾಯಮಾಡಲು ವಿಶ್ವಾಸಿಗಳು ನಿರ್ಧರಿಸಿದರು. ವಿಶ್ವಾಸಿಗಳಲ್ಲಿ ಪ್ರತಿಯೊಬ್ಬರೂ ತಮ್ಮಿಂದಾದಷ್ಟನ್ನು ಅವರಿಗೆ ಕಳುಹಿಸಿಕೊಡಲು ಯೋಜನೆ ಮಾಡಿದರು. 30 ಅವರು ಹಣವನ್ನು ಕೂಡಿಸಿ ಬಾರ್ನಬ ಮತ್ತು ಸೌಲರಿಗೆ ಕೊಟ್ಟರು. ಬಳಿಕ ಬಾರ್ನಬ ಮತ್ತು ಸೌಲರು ಅದನ್ನು ತಂದು ಜುದೇಯದಲ್ಲಿದ್ದ ಸಭಾಹಿರಿಯರಿಗೆ ಕೊಟ್ಟರು.
* 11:2 ಯೆಹೂದ್ಯ ವಿಶ್ವಾಸಿಗಳು ಅಕ್ಷರಶಃ, “ಸುನ್ನತಿಯಾದವರು.” ಕ್ರೈಸ್ತರೆಲ್ಲಾ ಸುನ್ನತಿ ಮಾಡಿಸಿಕೊಳ್ಳಬೇಕು ಮತ್ತು ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕು ಎಂದು ಹೇಳುತ್ತಿದ್ದ ಯೆಹೂದ್ಯರೆಂಬ ಅರ್ಥವನ್ನು ಇದು ಕೊಡಬಹುದು 11:15 ಪ್ರಾರಂಭ ಪಂಚಾಶತ್ತಮ ದಿನದಂದು ಆರಂಭವಾದ ಸಭೆ.