5
ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ. ಆದರೆ ಈಗ ನಾವು ಈ ದೇಹದಲ್ಲಿ ಬಳಲಿ ಹೋಗಿದ್ದೇವೆ. ಪರಲೋಕದಲ್ಲಿರುವ ನಮ್ಮ ಮನೆಯನ್ನು ದೇವರು ನಮಗೆ ಯಾವಾಗ ಕೊಡುವನೊ ಎಂದು ಹಾತೊರೆಯುತ್ತಿದ್ದೇವೆ. ನಾವು ಅದನ್ನು ಧರಿಸಿಕೊಂಡಾಗ ಬೆತ್ತಲೆಯಾಗಿರುವುದಿಲ್ಲ. ಈ ಗುಡಾರದಲ್ಲಿರುವ ತನಕ ನಮಗೆ ಭಾರವಾದ ಹೊರೆಗಳಿವೆ ಮತ್ತು ನಾವು ನರಳುತ್ತೇವೆ. ಬೆತ್ತಲೆಯಾಗಿರಲು ನಾವು ಇಷ್ಟಪಡದೆ ಪರಲೋಕದ ಮನೆಯನ್ನು ಧರಿಸಿಕೊಳ್ಳಲು ಇಷ್ಟಪಡುತ್ತೇವೆ. ಸತ್ತುಹೋಗುವ ಈ ದೇಹವನ್ನು ಜೀವವು ಪೂರ್ಣವಾಗಿ ಆವರಿಸಿಕೊಳ್ಳುವುದು. ಇದಕ್ಕೋಸ್ಕರವಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾನೆ ಮತ್ತು ಇದನ್ನು ಖಚಿತಪಡಿಸಲು ಪವಿತ್ರಾತ್ಮನನ್ನೇ ನಮಗೆ ಅನುಗ್ರಹಿಸಿದ್ದಾನೆ.
ಆದ್ದರಿಂದ ಯಾವಾಗಲೂ ಧೈರ್ಯದಿಂದಿದ್ದೇವೆ. ಈ ದೇಹದಲ್ಲಿ ವಾಸವಾಗಿರುವ ತನಕ ಪ್ರಭುವಿನಿಂದ ದೂರವಾಗಿರುತ್ತೇವೆಂಬುದು ನಮಗೆ ತಿಳಿದಿದೆ. ನಾವು ಯಾವುದನ್ನು ನೋಡುತ್ತಿದ್ದೇವೋ ಅದರಿಂದ ಜೀವಿಸುತ್ತಿಲ್ಲ. ಆದರೆ ಯಾವುದನ್ನು ನಂಬಿದ್ದೇವೋ ಅದರಿಂದ ಜೀವಿಸುತ್ತಿದ್ದೇವೆ. ಆದ್ದರಿಂದ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಪ್ರಭುವಿನೊಂದಿಗೆ ವಾಸಿಸುವುದನ್ನೇ ನಿಜವಾಗಿಯೂ ಅಪೇಕ್ಷಿಸುತ್ತೇವೆ. ದೇವರನ್ನು ಮೆಚ್ಚಿಸಬೇಕೆಂಬುದೊಂದೇ ನಮಗಿರುವ ಉದ್ದೇಶವಾಗಿದೆ. ನಾವು ನಮ್ಮ ದೇಹದಲ್ಲಿ ಇಲ್ಲಿ ವಾಸವಾಗಿರುವಾಗಲೂ ಪ್ರಭುವಿನೊಂದಿಗೆ ಅಲ್ಲಿ ವಾಸವಾಗಿರುವಾಗಲೂ ಆತನನ್ನು ಮೆಚ್ಚಿಸಬೇಕೆಂಬುದೊಂದೇ ನಮ್ಮ ಬಯಕೆಯಾಗಿದೆ. 10 ನಾವೆಲ್ಲರೂ ನ್ಯಾಯ ವಿಚಾರಣೆಗಾಗಿ ಕ್ರಿಸ್ತನ ಮುಂದೆ ನಿಂತುಕೊಳ್ಳಲೇಬೇಕು. ಪ್ರತಿಯೊಬ್ಬನು ಇಹಲೋಕದ ದೇಹದಲ್ಲಿ ವಾಸವಾಗಿದ್ದಾಗ ಮಾಡಿದ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಪ್ರತಿಫಲವನ್ನು ಹೊಂದುವನು.
ಜನರನ್ನು ದೇವರ ಸ್ನೇಹಿತರನ್ನಾಗಿಸಲು ಮಾಡತಕ್ಕ ಸಹಾಯ
11 ಪ್ರಭುವಿನ ಭಯ ಎಂದರೇನೆಂಬುದು ನಮಗೆ ತಿಳಿದಿದೆ. ಆದ್ದರಿಂದ ಸತ್ಯವನ್ನು ಸ್ವೀಕರಿಸಿಕೊಳ್ಳುವಂತೆ ಜನರಿಗೆ ಸಹಾಯ ಮಾಡಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲನು. ನೀವು ಸಹ ನಿಮ್ಮ ಹೃದಯಗಳಲ್ಲಿ ನಮ್ಮನ್ನು ತಿಳಿದುಕೊಂಡಿದ್ದೀರೆಂದು ನಂಬುತ್ತೇವೆ. 12 ನಾವು ನಮ್ಮನ್ನು ನಿಮ್ಮ ಮುಂದೆ ಮತ್ತೊಮ್ಮೆ ನಿರೂಪಿಸಿಕೊಳ್ಳುತ್ತಿಲ್ಲ. ಆದರೆ ನಮ್ಮ ಬಗ್ಗೆ ನಿಮಗೆ ಹೇಳುತ್ತಿದ್ದೇವೆಯಷ್ಟೆ. ನೀವು ನಮ್ಮ ವಿಷಯದಲ್ಲಿ ಹೆಮ್ಮೆಪಡುವುದಕ್ಕೆ ನಿಮಗೆ ಕಾರಣಗಳನ್ನು ಕೊಡುತ್ತಿದ್ದೇವೆ. ಆಗ, ಕಣ್ಣಿಗೆ ಕಾಣುವ ಸಂಗತಿಗಳ ಬಗ್ಗೆ ಹೆಮ್ಮೆಪಡುವ ಜನರಿಗೆ ಕೊಡತಕ್ಕ ಉತ್ತರವು ನಿಮ್ಮಲಿರುವುದು. ಆ ಜನರು ಒಬ್ಬ ವ್ಯಕ್ತಿಯ ಹೃದಯದ ಸ್ಥಿತಿಯ ಬಗ್ಗೆ ಚಿಂತಿಸುವುದಿಲ್ಲ. 13 ನಾವು ಹುಚ್ಚರಾಗಿದ್ದರೆ ಅದು ದೇವರಿಗೋಸ್ಕರವಾಗಿಯೇ. ನಮಗೆ ಸ್ವಸ್ಥಬುದ್ಧಿಯಿದ್ದರೆ ಅದು ನಿಮಗೋಸ್ಕರವಾಗಿಯೇ. 14 ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಿಸುತ್ತದೆ. ಏಕೆಂದರೆ, ಎಲ್ಲಾ ಜನರಿಗೋಸ್ಕರವಾಗಿ ಆತನು ಸತ್ತನೆಂಬುದು ನಮಗೆ ಗೊತ್ತಿದೆ. ಆದ್ದರಿಂದ ಎಲ್ಲರೂ ಸತ್ತುಹೋದರು. 15 ಜೀವಿಸುವವರು ಇನ್ನು ಮೇಲೆ ತಮಗೋಸ್ಕರ ಜೀವಿಸಬಾರದೆಂದು ಕ್ರಿಸ್ತನು ಎಲ್ಲಾ ಜನರಿಗಾಗಿ ಸತ್ತನು. ಆ ಜನರು ತನಗೋಸ್ಕರ ಜೀವಿಸಲೆಂದು ಆತನು ಅವರಿಗೋಸ್ಕರ ಸತ್ತನು ಮತ್ತು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನು.
16 ಹೀಗಿರಲಾಗಿ, ಲೋಕವು ಜನರ ವಿಷಯವಾಗಿ ಯೋಚಿಸುವಂತೆ ಇಂದಿನಿಂದ ನಾವು ಯಾರ ಬಗ್ಗೆಯೂ ಯೋಚಿಸುವುದಿಲ್ಲ. ಲೋಕವು ಯೋಚಿಸುವಂತೆ ಹಿಂದಿನ ಕಾಲದಲ್ಲಿ ನಾವು ಕ್ರಿಸ್ತನ ಬಗ್ಗೆ ಯೋಚಿಸಿಕೊಂಡಿದ್ದೆವು. ಆದರೆ ಈಗ ನಾವು ಆ ರೀತಿಯಲ್ಲಿ ಯೋಚಿಸುವುದಿಲ್ಲ. 17 ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು. 18 ಇದೆಲ್ಲಾ ದೇವರಿಂದಲೇ ಆಯಿತು. ಕ್ರಿಸ್ತನ ಮೂಲಕವಾಗಿ ದೇವರು ನಮ್ಮನ್ನು ತನ್ನೊಂದಿಗೆ ಸಮಾಧಾನ ಪಡಿಸಿಕೊಂಡಿದ್ದಾನೆ. ಇದಲ್ಲದೆ ಇತರರನ್ನು ಈ ಸಮಾಧಾನಕ್ಕೆ ಕರೆದುಕೊಂಡು ಬರುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ. 19 ಅಂದರೆ, ದೇವರು ಕ್ರಿಸ್ತನಲ್ಲಿ ಇಡೀ ಜಗತ್ತನ್ನೇ ತನ್ನೊಂದಿಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನು. ದೇವರು ಕ್ರಿಸ್ತನಲ್ಲಿ ಜನರ ಅಪರಾಧಗಳನ್ನು ಪರಿಗಣಿಸುವುದಿಲ್ಲ. ಈ ಸಮಾಧಾನದ ಸಂದೇಶವನ್ನು ಜನರಿಗೆ ತಿಳಿಸುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ. 20 ಆದ್ದರಿಂದ ಕ್ರಿಸ್ತನ ಪರವಾಗಿ ಮಾತಾಡಲು ನಮ್ಮನ್ನು ಕಳುಹಿಸಲಾಗಿದೆ. ಇದು, ದೇವರು ನಮ್ಮ ಮೂಲಕವಾಗಿ ಜನರನ್ನು ಕರೆಯುವಂತಿದೆ. ದೇವರೊಂದಿಗೆ ಸಮಾಧಾನವಾಗಿರಿ ಎಂದು ನಾವು ನಿಮ್ಮನ್ನು ಬೇಡಿಕೊಳ್ಳುವಾಗ ಕ್ರಿಸ್ತನ ಪರವಾಗಿ ಮಾತಾಡುವವರಾಗಿದ್ದೇವೆ. 21 ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.