26
ದೇವರಿಗೆ ಸ್ತೋತ್ರ ಗೀತೆ
ಆ ಸಮಯದಲ್ಲಿ ಜನರು ಈ ಹಾಡನ್ನು ಯೆಹೂದದಲ್ಲಿ ಹಾಡುವರು:
 
ಯೆಹೋವನು ನಮಗೆ ರಕ್ಷಣೆಯನ್ನು ಕೊಡುತ್ತಾನೆ.
ನಮಗೆ ಬಲವಾದ ಪಟ್ಟಣವಿದೆ. ಅದಕ್ಕೆ ಬಲವಾದ ಗೋಡೆಗಳೂ ಕೋಟೆಗಳೂ ಇವೆ.
ದ್ವಾರಗಳನ್ನು ತೆರೆಯಿರಿ. ಒಳ್ಳೆಯ ಜನರು ಅದರಲ್ಲಿ ಪ್ರವೇಶಿಸುವರು.
ಅವರು ದೇವರ ನಿಯಮಗಳನ್ನು ಅನುಸರಿಸುತ್ತಾರೆ.
 
ಯೆಹೋವನೇ, ನಿನ್ನಲ್ಲಿ ಭರವಸವಿಟ್ಟವರಿಗೆ
ನೀನು ನಿಜವಾದ ಸಮಾಧಾನವನ್ನು ಅನುಗ್ರಹಿಸುವೆ.
 
ಆದ್ದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸವಿಡಿರಿ.
ಯಾಕೆಂದರೆ ನಿಮಗೆ ದೇವರಾದ ಯೆಹೋವನಲ್ಲಿ ಸುರಕ್ಷತೆಯ ಸ್ಥಳವಿದೆ.
ಆದರೆ ಯೆಹೋವನು ಗರ್ವದ ನಗರವನ್ನು ನಾಶಮಾಡುವನು.
ಅಲ್ಲಿ ವಾಸಿಸುವವರನ್ನು ಆತನು ಶಿಕ್ಷಿಸುತ್ತಾನೆ.
ಯೆಹೋವನು ಆ ಉನ್ನತವಾದ ನಗರವನ್ನು ಧೂಳಿಗೆ ಹಾಕಿಬಿಡುವನು.
ಅದು ಕಾಲುತುಳಿತಕ್ಕೆ ಈಡಾಗಿದೆ.
ಆಗ ದೀನರೂ ಬಡಜನರೂ ಆ ಅವಶೇಷಗಳ ಮೇಲೆ ನಡೆಯುವರು.
 
ಪ್ರಾಮಾಣಿಕತೆಯು ಒಳ್ಳೆಯವರ ಜೀವನ ಶೈಲಿ.
ಅವರು ನೇರವಾದ ಮತ್ತು ಸತ್ಯವಾದ ಮಾರ್ಗವನ್ನು ಅನುಸರಿಸುವರು.
ಯೆಹೋವನೇ, ನೀನು ಆ ಮಾರ್ಗವನ್ನು ಅನುಸರಿಸಲು
ಸುಲಭವಾಗುವಂತೆ ಮಾಡುವೆ.
ಆದರೆ ಯೆಹೋವನೇ, ನಾವು ನಿನ್ನ ನ್ಯಾಯವಿಚಾರಣೆಯ ರೀತಿಗಾಗಿ ಕಾಯುತ್ತಿದ್ದೇವೆ.
ನಮ್ಮ ಆತ್ಮಗಳು ನಿನ್ನನ್ನೂ ನಿನ್ನ ನಾಮವನ್ನೂ ನೆನಪು ಮಾಡುತ್ತವೆ.
ನಮ್ಮ ಆತ್ಮವು ನಿನ್ನೊಂದಿಗೆ ರಾತ್ರಿಯಲ್ಲಿರಲು ಆಶಿಸುತ್ತದೆ.
ನಮ್ಮೊಳಗಿರುವ ಆತ್ಮವು ನಿನ್ನ ಸಹವಾಸವನ್ನು ಬಯಸುತ್ತದೆ.
ಹೊಸ ದಿವಸಗಳ ಮುಂಜಾನೆಯಲ್ಲಿ ನಿನ್ನೊಂದಿಗಿರಲು ಆಶಿಸುತ್ತದೆ.
ನಿನ್ನ ನ್ಯಾಯವು ಈ ಭೂಮಿಗೆ ಬಂದಾಗ ಜನರು ಜೀವನದ ಸತ್ಯಮಾರ್ಗವನ್ನು ಅರಿಯುವರು.
10 ದುಷ್ಟರಿಗೆ ದಯೆತೋರಿಸಿದರೆ
ಅವರು ಸುಕಾರ್ಯಗಳನ್ನು ಮಾಡಲು ಕಲಿಯುವುದಿಲ್ಲ.
ದುಷ್ಟರು ಯಥಾರ್ಥರ ಲೋಕದಲ್ಲಿ ಜೀವಿಸಿದರೂ ಅವರು ದುಷ್ಕೃತ್ಯಗಳನ್ನೇ ಮಾಡುವರು.
ಆ ದುಷ್ಟರು ಯೆಹೋವನ ಮಹತ್ವವನ್ನು ಎಂದೂ ಗಮನಿಸಲಾರರು.
11 ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ
ಅವರು ಅದನ್ನು ನೋಡುವರು.
ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ.
ಆಗ ಅವರು ಅವಮಾನ ಹೊಂದುವರು.
ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.
12 ಯೆಹೋವನೇ, ನೀನು ಮಾಡಬಯಸಿದ ಎಲ್ಲವುಗಳಲ್ಲಿ ಯಶಸ್ವಿಯಾಗಿರುವೆ.
ಆದ್ದರಿಂದ ನಮಗೆ ಶಾಂತಿಯನ್ನು ಅನುಗ್ರಹಿಸು.
ದೇವರು ತನ್ನ ಜನರಿಗೆ ಹೊಸ ಜೀವವನ್ನು ಕೊಡುವನು
13 ಯೆಹೋವನೇ, ನೀನೇ ನಮ್ಮ ದೇವರು. ಆದರೆ ಹಿಂದಿನ ಕಾಲದಲ್ಲಿ ನಾವು ಇತರ ಪ್ರಭುಗಳನ್ನು ಅನುಸರಿಸಿದೆವು.
ನಾವು ನಮ್ಮ ಒಡೆಯರುಗಳಿಗೆ ಸೇರಿದ್ದೆವು.
ಆದರೆ ಈಗ ಜನರು ಒಂದೇ ಹೆಸರನ್ನು, ಅಂದರೆ ನಿನ್ನ ಹೆಸರನ್ನೇ ನೆನಪುಮಾಡಲಿ.
14 ಇತರ ದೇವರುಗಳಿಗೆ ಜೀವವಿಲ್ಲ.
ಪ್ರೇತಗಳು ಸತ್ತವರೊಳಗಿಂದ ಏಳುವದಿಲ್ಲ.
ನೀನು ಅವುಗಳನ್ನು ನಾಶಮಾಡಲು ತೀರ್ಮಾನಿಸಿದೆ.
ಅದರ ಬಗ್ಗೆ ನಮಗೆ ನೆನಪು ಹುಟ್ಟಿಸುವ ಎಲ್ಲಾ ವಿಚಾರಗಳನ್ನು ನೀನು ನಾಶಮಾಡಿದೆ.
15 ನೀನು ಪ್ರೀತಿಸುವ ಜನಾಂಗಕ್ಕೆ ನೀನು ಸಹಾಯ ಮಾಡಿದೆ.
ಬೇರೆ ಜನಾಂಗದವರು ಅವರನ್ನು ಸೋಲಿಸದಂತೆ ಮಾಡಿದೆ.
16 ಯೆಹೋವನೇ, ಕಷ್ಟ ಬಂದಾಗ
ಜನರಿಗೆ ನಿನ್ನ ನೆನಪಾಗುವುದು.
ನೀನು ಅವರನ್ನು ಶಿಕ್ಷಿಸಿದಾಗ
ಅವರು ನಿನಗೆ ಮೌನ ಪ್ರಾರ್ಥನೆ ಮಾಡುವರು.
17 ಯೆಹೋವನೇ, ನಾವು ನಿನ್ನೊಂದಿಗೆ ಇಲ್ಲದಿರುವಾಗ
ಪ್ರಸವವೇದನೆಯಿಂದ ನರಳುವ ಸ್ತ್ರೀಯರಂತಿದ್ದೇವೆ.
18 ಅದೇ ರೀತಿಯಲ್ಲಿ ನಾವು ನೋವನ್ನು ಅನುಭವಿಸುತ್ತೇವೆ.
ನಾವು ಹೆರುವದು ಕೇವಲ ಗಾಳಿಯನ್ನೇ.
ನಾವು ಈ ಲೋಕದೊಳಗೆ ಹೊಸಜೀವಿಗಳನ್ನು ನಿರ್ಮಿಸುವದಿಲ್ಲ.
ನಾವು ದೇಶಕ್ಕೆ ರಕ್ಷಣೆಯನ್ನು ತರುವದಿಲ್ಲ.
19  ಆದರೆ ಯೆಹೋವನು ಹೇಳುವುದೇನೆಂದರೆ,
“ನಿನ್ನ ಜನರು ಸತ್ತಿದ್ದಾರೆ.
ಆದರೆ ಅವರು ಮತ್ತೆ ಬದುಕುವರು.
ನನ್ನ ಜನರ ದೇಹಗಳು
ಸತ್ತವರೊಳಗಿಂದ ಏಳುವವು.
ಭೂಮಿಯ ಮೇಲೆ ಸತ್ತಿರುವ ಜನರೇ,
ಎದ್ದುನಿಂತು ಸಂತೋಷಿಸಿರಿ.
ನಿಮ್ಮನ್ನು ಆವರಿಸಿದ ಮಂಜು
ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ.
ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ
ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”
ಶಿಕ್ಷೆ ಅಥವಾ ಬಹುಮಾನ
20 ನನ್ನ ಜನರೇ, ನಿಮ್ಮ ನಿಮ್ಮ ಕೋಣೆಯೊಳಗೆ
ಹೋಗಿ ಕದಮುಚ್ಚಿರಿ.
ಸ್ವಲ್ಪಕಾಲ ನೀವು ಅಲ್ಲಿಯೇ ಅಡಗಿಕೊಳ್ಳಿರಿ.
ದೇವರ ಕೋಪ ತೀರುವ ತನಕ ಅಲ್ಲಿಯೇ ಅವಿತುಕೊಳ್ಳಿರಿ.
21 ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ
ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ.
ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು.
ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.