6
ಜೆರಿಕೊ ಪಟ್ಟಣದ ಬಾಗಿಲನ್ನು ಮುಚ್ಚಲಾಗಿತ್ತು. ಇಸ್ರೇಲರು ಸಮೀಪದಲ್ಲೇ ಇದ್ದುದರಿಂದ ಪಟ್ಟಣದ ಜನರು ಹೆದರಿಕೊಂಡಿದ್ದರು. ಒಬ್ಬರಾದರೂ ಪಟ್ಟಣದಲ್ಲಿ ಪ್ರವೇಶ ಮಾಡಲಿಲ್ಲ; ಒಬ್ಬರಾದರೂ ಪಟ್ಟಣದಿಂದ ಹೊರ ಬರಲಿಲ್ಲ.
ಆಗ ಯೆಹೋವನು ಯೆಹೋಶುವನಿಗೆ, “ಇಗೋ ನೋಡು, ನೀನು ಜೆರಿಕೊ ನಗರವನ್ನು ಗೆಲ್ಲುವಂತೆ ಮಾಡುತ್ತೇನೆ. ನೀನು ಅರಸನನ್ನು ಮತ್ತು ನಗರದ ಎಲ್ಲ ಯೋಧರನ್ನು ಸೋಲಿಸುವೆ. ಪ್ರತಿ ನಿತ್ಯ ಒಂದು ಸಲ ನಿನ್ನ ಸೇನೆಯೊಂದಿಗೆ ನಗರದ ಸುತ್ತಲೂ ಸುತ್ತಬೇಕು. ಹೀಗೆ ಆರು ದಿನಗಳವರೆಗೆ ಸುತ್ತಬೇಕು. ಏಳು ಮಂದಿ ಯಾಜಕರಿಗೆ ಟಗರಿನ ಕೊಂಬಿನಿಂದ ಮಾಡಿದ ತುತ್ತೂರಿಗಳನ್ನು ಹಿಡಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ಹೋಗಲು ಹೇಳು. ಏಳನೆಯ ದಿನದಲ್ಲಿ ನಗರದ ಸುತ್ತಲೂ ನೀವು ಏಳುಸಲ ಸುತ್ತಬೇಕು. ಏಳನೆಯ ದಿನದಲ್ಲಿ ಸುತ್ತುವಾಗ ತುತ್ತೂರಿಯನ್ನು ಊದಬೇಕೆಂದು ಯಾಜಕರಿಗೆ ಹೇಳು. ಯಾಜಕರ ತುತ್ತೂರಿ ಧ್ವನಿಯನ್ನು ಕೇಳಿದಾಗ ಜನರು ಆರ್ಭಟಿಸಬೇಕು. ಆಗ ನಗರದ ಗೋಡೆಗಳು ಬೀಳುವವು; ಆಗ ನೀವು ನೇರವಾಗಿ ನಗರದೊಳಗೆ ಹೋಗಿರಿ” ಅಂದನು.
ಜೆರಿಕೊವನ್ನು ಸ್ವಾಧೀನಪಡಿಸಿಕೊಂಡದ್ದು
ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಒಟ್ಟಿಗೆ ಕರೆದು, ಅವರಿಗೆ, “ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗಿರಿ. ಏಳು ಮಂದಿ ಯಾಜಕರು ತುತ್ತೂರಿಗಳನ್ನು ತೆಗೆದುಕೊಂಡು ಪೆಟ್ಟಿಗೆಯ ಮುಂದೆ ನಡೆಯಬೇಕು” ಎಂದು ಹೇಳಿದನು.
ಬಳಿಕ ಯೆಹೋಶುವನು ಜನರಿಗೆ, “ಈಗ ನಗರದ ಸುತ್ತ ಪ್ರದಕ್ಷಿಣೆ ಹಾಕಿರಿ. ಆಯುಧಗಳನ್ನು ಹಿಡಿದುಕೊಂಡು ಯೋಧರು ಯೆಹೋವನ ಪವಿತ್ರಪೆಟ್ಟಿಗೆಯ ಮುಂದೆ ನಡೆಯಬೇಕು” ಎಂದು ಆಜ್ಞಾಪಿಸಿದನು.
ಯೆಹೋಶುವನು ಜನರೊಂದಿಗೆ ಮಾತನಾಡುವದನ್ನು ಮುಗಿಸಿದ ಮೇಲೆ, ಏಳು ಮಂದಿ ಯಾಜಕರು ಏಳು ತುತ್ತೂರಿಗಳನ್ನು ತೆಗೆದುಕೊಂಡು ಊದುತ್ತಾ ಯೆಹೋವನ ಮುಂದೆ ನಡೆಯಲು ಪ್ರಾರಂಭಿಸಿದರು. ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ಅವರನ್ನು ಹಿಂಬಾಲಿಸಿದರು. ಆಯುಧಗಳನ್ನು ಹಿಡಿದುಕೊಂಡ ಯೋಧರು ಯಾಜಕರ ಮುಂದೆ ನಡೆದರು. ಪವಿತ್ರ ಪೆಟ್ಟಿಗೆಯ ಹಿಂದೆ ಜನರು ಕ್ರಮಬದ್ಧವಾಗಿ ಹೆಜ್ಜೆಯನ್ನು ಹಾಕುತ್ತಾ ತಮ್ಮ ತುತ್ತೂರಿಗಳನ್ನು ಊದುತ್ತಿದ್ದರು. 10 ಯೆಹೋಶುವನು ಜನರಿಗೆ, “ಆರ್ಭಟಿಸಬೇಡಿರಿ, ನಾನು ಹೇಳುವ ದಿನದವರೆಗೆ ಒಂದು ಶಬ್ದವನ್ನೂ ಉಚ್ಚರಿಸಬೇಡಿರಿ. ಆಮೇಲೆ ನೀವು ಆರ್ಭಟಿಸಬಹುದು” ಎಂದು ಹೇಳಿದನು.
11 ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಒಂದು ಸಲ ನಗರವನ್ನು ಸುತ್ತಿದ ಮೇಲೆ ಪಾಳೆಯಕ್ಕೆ ಹಿಂತಿರುಗಿ ಬಂದು ಆ ರಾತ್ರಿ ಅಲ್ಲಿಯೇ ಉಳಿದುಕೊಂಡರು.
12 ಯೆಹೋಶುವನು ಮರುದಿನ ಬೆಳಿಗ್ಗೆ ಎದ್ದನು. ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಪುನಃ ಹೊತ್ತುಕೊಂಡು ಹೋದರು. 13 ಏಳುಮಂದಿ ಯಾಜಕರು ಏಳು ತುತ್ತೂರಿಗಳನ್ನು ತೆಗೆದುಕೊಂಡು ಯೆಹೋವನ ಪವಿತ್ರ ಪೆಟ್ಟಿಗೆಯ ಮುಂದೆ ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ತುತ್ತೂರಿಗಳನ್ನು ಊದುತ್ತಾ ನಡೆದರು. ಆಯಧ ಸನ್ನದ್ಧರಾದ ಸೈನಿಕರು ಅವರ ಮುಂದೆ ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ನಡೆದರು. ಯೆಹೋವನ ಪವಿತ್ರ ಪೆಟ್ಟಿಗೆಯ ಹಿಂಭಾಗದಲ್ಲಿ ಉಳಿದ ಜನರು ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ತುತ್ತೂರಿಗಳನ್ನು ಊದುತ್ತಾ ಪಟ್ಟಣದ ಸುತ್ತಲೂ ನಡೆದರು. 14 ಎರಡನೆಯ ದಿನ ಅವರೆಲ್ಲರು ನಗರವನ್ನು ಒಂದು ಸಲ ಕ್ರಮಬದ್ಧವಾಗಿ ಸುತ್ತಿ ಪಾಳೆಯಕ್ಕೆ ಹಿಂತಿರುಗಿದರು. ಹೀಗೆ ಅವರು ಆರು ದಿನಗಳವರೆಗೆ ಮಾಡಿದರು.
15 ಏಳನೆಯ ದಿನ ಸೂರ್ಯೋದಯವಾಗುತ್ತಲೇ ಅವರು ಎದ್ದರು. ಪಟ್ಟಣದ ಸುತ್ತಲು ಅವರು ಏಳು ಸಲ ಸುತ್ತಿದರು. ಅವರು ಮುಂಚಿನ ದಿನಗಳಲ್ಲಿ ನಡೆದ ಕ್ರಮದಲ್ಲಿಯೇ ನಡೆದರು. ಆದರೆ ಆ ದಿನ ಅವರು ನಗರದ ಸುತ್ತಲು ಏಳು ಸಲ ಸುತ್ತಿದರು. 16 ಏಳನೆಯ ಸಲ ಅವರು ನಗರವನ್ನು ಸುತ್ತುವಾಗ ಯಾಜಕರು ತುತ್ತೂರಿಗಳನ್ನು ಊದಿದರು. ಆಗ ಯೆಹೋಶುವನು ಜನರಿಗೆ, “ಈಗ ಆರ್ಭಟಿಸಿರಿ, ಯೆಹೋವನು ಈ ನಗರವನ್ನು ನಿಮಗೆ ಕೊಟ್ಟಿದ್ದಾನೆ. 17 ಈ ನಗರ ಮತ್ತು ಇದರಲ್ಲಿರುವದೆಲ್ಲವೂ ಯೆಹೋವನ ಸ್ವತ್ತಾಗಿದೆ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಮನೆಯಲ್ಲಿರುವ ಎಲ್ಲ ಜನರು ಮಾತ್ರ ಜೀವಸಹಿತ ಉಳಿಯಲಿ, ಅವರನ್ನು ಕೊಲ್ಲಬಾರದು. ಏಕೆಂದರೆ ರಾಹಾಬಳು ನಮ್ಮ ಆ ಇಬ್ಬರು ಗೂಢಚಾರರಿಗೆ ಸಹಾಯ ಮಾಡಿದ್ದಾಳೆ. 18 ಅಲ್ಲದೆ ನಾವು ಉಳಿದೆಲ್ಲವನ್ನು ನಾಶಪಡಿಸಬೇಕೆಂಬುದನ್ನು ನೆನಪಿಡಿ. ಅವರ ವಸ್ತುಗಳನ್ನು ತೆಗೆದುಕೊಳ್ಳಬೇಡಿ. ನೀವು ಅವರ ವಸ್ತುಗಳನ್ನು ತೆಗೆದುಕೊಂಡರೆ ಮತ್ತು ಅವುಗಳನ್ನು ನಮ್ಮ ಪಾಳೆಯಕ್ಕೆ ತಂದರೆ ನೀವೇ ನಾಶವಾಗುವಿರಿ; ಇಸ್ರೇಲಿನ ಎಲ್ಲಾ ಜನರಿಗೆ ಕಷ್ಟವನ್ನುಂಟುಮಾಡುವಿರಿ. 19 ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ಎಲ್ಲಾ ವಸ್ತುಗಳು ಯೆಹೋವನ ಸ್ವತ್ತಾಗಿವೆ. ಆದ್ದರಿಂದ ಅವುಗಳನ್ನು ಆತನ ಭಂಡಾರಕ್ಕೆ ಸೇರಿಸಬೇಕು” ಎಂದು ಆಜ್ಞಾಪಿಸಿದನು.
20 ಯಾಜಕರು ತುತ್ತೂರಿಗಳನ್ನು ಊದಿದಾಗ ಜನರು ಆರ್ಭಟಿಸತೊಡಗಿದರು. ಆಗ ಗೋಡೆಗಳು ಬಿದ್ದವು; ಜನರು ನೇರವಾಗಿ ನಗರದೊಳಗೆ ನುಗ್ಗಿದರು. ಹೀಗೆ ಇಸ್ರೇಲರು ನಗರವನ್ನು ಸ್ವಾಧೀನಪಡಿಸಿಕೊಂಡರು. 21 ಅವರು ನಗರದಲ್ಲಿದ್ದ ಎಲ್ಲವನ್ನು ನಾಶಪಡಿಸಿದರು; ಅಲ್ಲಿದ್ದ ತರುಣರನ್ನು, ವೃದ್ಧರನ್ನು, ತರುಣಿಯರನ್ನು, ವೃದ್ಧೆಯರನ್ನು, ದನಕರುಗಳನ್ನು, ಕುರಿಗಳನ್ನು ಮತ್ತು ಕತ್ತೆಗಳನ್ನು ಕೊಂದುಹಾಕಿದರು.
22 ಯೆಹೋಶುವನು ಆ ಇಬ್ಬರು ಗೂಢಚಾರರಿಗೆ, “ನೀವು ಪ್ರಮಾಣ ಮಾಡಿರುವುದರಿಂದ ಆ ವೇಶ್ಯೆಯ ಮನೆಗೆ ಹೋಗಿ ಅವಳನ್ನು ಹೊರಗೆ ಕರೆದುಕೊಂಡು ಬನ್ನಿ. ಅವಳ ಸಂಗಡ ಇರುವ ಎಲ್ಲಾ ಜನರನ್ನೂ ಕರೆದುಕೊಂಡು ಬನ್ನಿ” ಎಂದು ಹೇಳಿದನು.
23 ಆ ಇಬ್ಬರು, ರಾಹಾಬಳ ಮನೆಗೆ ಹೋಗಿ ಅವಳನ್ನು ಹೊರಗೆ ಕರೆದುಕೊಂಡು ಬಂದರು. ಅವಳ ತಂದೆ, ತಾಯಿ, ಸಹೋದರರು ಮತ್ತು ಅವಳ ಎಲ್ಲ ಕುಟುಂಬದವರನ್ನು ಮತ್ತು ಅವಳ ಸಂಗಡ ಅಲ್ಲಿ ಇದ್ದ ಬೇರೆ ಎಲ್ಲ ಜನರನ್ನು ಸಹ ಅವರು ಹೊರಗೆ ಕರೆದುಕೊಂಡು ಬಂದರು. ಅವರೆಲ್ಲರನ್ನು ಇಸ್ರೇಲಿನ ಜನರ ಪಾಳೆಯದ ಹೊರಗಡೆ ಒಂದು ಸುರಕ್ಷಿತವಾದ ಸ್ಥಳದಲ್ಲಿ ಇರಿಸಿದರು.
24 ಬಳಿಕ ಇಸ್ರೇಲರು ಇಡೀ ನಗರವನ್ನು ಸುಟ್ಟು ಹಾಕಿದರು. ಅವರು ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ವಸ್ತುಗಳನ್ನು ಬಿಟ್ಟು ನಗರದಲ್ಲಿನ ಉಳಿದೆಲ್ಲವನ್ನು ಸುಟ್ಟು ಹಾಕಿದರು. ಅವರು ಆ ವಸ್ತುಗಳನ್ನು ಯೆಹೋವನಿಗಾಗಿ ಉಳಿಸಿದರು. 25 ಯೆಹೋಶುವನು ವೇಶ್ಯೆಯಾದ ರಾಹಾಬಳನ್ನೂ ಅವಳ ಕುಟುಂಬವನ್ನೂ ಅವಳ ಸಂಗಡ ಇದ್ದ ಬೇರೆ ಜನರನ್ನೂ ಉಳಿಸಿದನು. ಯೆಹೋಶುವನು ಜೆರಿಕೊವಿಗೆ ಕಳಿಸಿಕೊಟ್ಟ ಗೂಢಚಾರರಿಗೆ ರಾಹಾಬಳು ಸಹಾಯ ಮಾಡಿದ್ದಕ್ಕಾಗಿ ಯೆಹೋಶುವನು ಅವರೆಲ್ಲರನ್ನು ಉಳಿಸಿದನು. ರಾಹಾಬಳು ಇಂದಿಗೂ ಸಹ ಇಸ್ರೇಲಿನ ಜನರೊಂದಿಗೆ ವಾಸವಾಗಿದ್ದಾಳೆ.
26 ಆ ಸಮಯದಲ್ಲಿ ಯೆಹೋಶುವನು, ಇಸ್ರೇಲಿನ ಜನರಿಂದ ಪ್ರಮಾಣಮಾಡಿಸಿ ಅವರಿಗೆ,
 
“ಈ ಜೆರಿಕೊ ಪಟ್ಟಣವನ್ನು ಪುನಃ ಕಟ್ಟಲು ಪ್ರಯತ್ನಿಸುವವನು
ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಲಿ.
ಈ ನಗರಕ್ಕೆ ಅಡಿಗಲ್ಲನ್ನಿಡುವ ವ್ಯಕ್ತಿಯು
ತನ್ನ ಹಿರಿಯ ಮಗನನ್ನು ಕಳೆದುಕೊಳ್ಳಲಿ;
ಹೆಬ್ಬಾಗಿಲನ್ನು ನಿಲ್ಲಿಸುವ ವ್ಯಕ್ತಿ
ತನ್ನ ಕಿರಿಯ ಮಗನನ್ನು ಕಳೆದುಕೊಳ್ಳಲಿ”
 
ಎಂದು ಹೇಳಿದನು.
27 ಯೆಹೋವನು ಯೆಹೋಶುವನ ಸಂಗಡ ಇದ್ದನು. ಯೆಹೋಶುವನು ದೇಶದಲ್ಲೆಲ್ಲಾ ಸುಪ್ರಸಿದ್ಧನಾದನು.