17
ಪಾಪ
(ಮತ್ತಾಯ 18:6-7 21-22; ಮಾರ್ಕ 9:42)
ಯೇಸು ತನ್ನ ಶಿಷ್ಯರಿಗೆ, “ಜನರನ್ನು ಪಾಪಕ್ಕೆ ನಡೆಸುವಂಥ ಸಂಗತಿಗಳು ಖಂಡಿತವಾಗಿ ಬರುತ್ತವೆ. ಆದರೆ ಅವುಗಳನ್ನು ಬರಮಾಡುವವನ ಗತಿಯನ್ನು ಏನು ಹೇಳಲಿ! ಬಲಹೀನರಾದ ಇವರನ್ನು ಪಾಪಕ್ಕೆ ನಡೆಸುವವನು ತನ್ನ ಕುತ್ತಿಗೆಗೆ ಒಂದು ದೊಡ್ಡ ಕಲ್ಲನ್ನು ಕಟ್ಟಿಕೊಂಡು ನೀರಿನಲ್ಲಿ ಮುಳುಗುವುದೇ ಉತ್ತಮ. ಆದ್ದರಿಂದ ಎಚ್ಚರಿಕೆಯಾಗಿರಿ!
“ನಿನ್ನ ಸಹೋದರನು ಪಾಪಮಾಡಿದರೆ, ಅವನನ್ನು ಖಂಡಿಸು. ಒಂದುವೇಳೆ ಅವನೇನಾದರೂ ತನ್ನ ತಪ್ಪಿಗಾಗಿ ಪಶ್ಚಾತ್ತಾಪಪಟ್ಟರೆ ಅವನನ್ನು ಕ್ಷಮಿಸು. ನಿನ್ನ ಸಹೋದರನು ನಿನಗೆ ಒಂದು ದಿನದಲ್ಲಿ ಏಳು ಸಲ ತಪ್ಪುಮಾಡಿ, ಪ್ರತಿಸಲವೂ, ‘ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ, ನೀನು ಅವನನ್ನು ಕ್ಷಮಿಸಬೇಕು” ಎಂದು ಹೇಳಿದನು.
ನಿಮ್ಮ ನಂಬಿಕೆ ಎಷ್ಟು ದೊಡ್ಡದು?
ಅಪೊಸ್ತಲರು ಪ್ರಭುವಿಗೆ (ಯೇಸು), “ನಮ್ಮ ನಂಬಿಕೆಯನ್ನು ಹೆಚ್ಚಿಸು!” ಎಂದು ಕೇಳಿಕೊಂಡರು.
ಪ್ರಭುವು ಅವರಿಗೆ ಹೀಗೆಂದನು: “ನಿಮ್ಮ ನಂಬಿಕೆ ಸಾಸಿವೆ ಕಾಳಷ್ಟು ದೊಡ್ಡದಾಗಿದ್ದರೆ, ನೀವು ಈ ಅತ್ತಿಮರಕ್ಕೆ, ‘ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿದರೂ ಅದು ನಿಮಗೆ ವಿಧೇಯವಾಗುತ್ತದೆ.
ಒಳ್ಳೆಯ ಸೇವಕರಾಗಿರಿ
“ನಿಮ್ಮಲ್ಲಿ ಒಬ್ಬನಿಗೆ ಹೊಲದಲ್ಲಿ ಕೆಲಸ ಮಾಡುವಂಥ ಒಬ್ಬ ಸೇವಕನಿದ್ದಾನೆಂದು ಭಾವಿಸಿಕೊಳ್ಳೋಣ. ಆ ಸೇವಕನು ಭೂಮಿಯನ್ನು ಉಳುತ್ತಿರುತ್ತಾನೆ ಅಥವಾ ಕುರಿಗಳನ್ನು ಮೇಯಿಸುತ್ತಿರುತ್ತಾನೆ. ಆ ಸೇವಕನು ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಬಂದಾಗ ನೀನು ಅವನಿಗೆ ಏನು ಹೇಳುವೆ? ‘ಒಳಗೆ ಬಾ! ಊಟಕ್ಕೆ ಕುಳಿತುಕೊ’ ಎಂದು ಹೇಳುವಿಯೋ? ಇಲ್ಲ! ನೀನು ಅವನಿಗೆ, ‘ನನಗೋಸ್ಕರ ಅಡಿಗೆ ಮಾಡು. ಬಳಿಕ ಶುಭ್ರವಾದ ಬಟ್ಟೆಯನ್ನು ಧರಿಸಿಕೊಂಡು ಬಂದು ನನಗೆ ಊಟಬಡಿಸು. ನಾನು ತಿಂದು ಕುಡಿದ ಮೇಲೆ ನೀನು ಊಟಮಾಡು’ ಎಂದು ಹೇಳುವೆಯಷ್ಟೇ. ಆ ಸೇವಕನು ತನ್ನ ಕೆಲಸ ಮಾಡಿದ್ದಕ್ಕಾಗಿ ನೀನೇನೂ ಅವನಿಗೆ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಬೇಕಾಗಿಲ್ಲ. ಸೇವಕನಿರುವುದು ಯಜಮಾನನು ಹೇಳಿದ್ದನ್ನು ಮಾಡುವುದಕ್ಕಾಗಿಯಷ್ಟೇ. 10 ಇದೇ ನಿಯಮ ನಿಮಗೂ ಅನ್ವಯಿಸುತ್ತದೆ. ನಿಮಗೆ ನೇಮಿಸಿದ ಕೆಲಸಗಳನ್ನು ನೀವು ಮಾಡಿ ಪೂರೈಸಿದಾಗ, ‘ನಾವು ಆಳುಗಳು, ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ’ ಎಂದು ಹೇಳಬೇಕು.”
ಕೃತಜ್ಞತೆಯುಳ್ಳವರಾಗಿರಿ
11 ಯೇಸುವು ಜೆರುಸಲೇಮಿಗೆ ಪ್ರಯಾಣಮಾಡುತ್ತಾ ಗಲಿಲಾಯದಿಂದ ಸಮಾರ್ಯಕ್ಕೆ ಹೋದನು. 12 ಅಲ್ಲಿ ಆತನು ಒಂದು ಗ್ರಾಮಕ್ಕೆ ಬಂದನು. ಅಲ್ಲಿ ಹತ್ತು ಜನರು ಆತನನ್ನು ಭೇಟಿಯಾದರು. ಅವರು ಯೇಸುವಿನ ಸಮೀಪಕ್ಕೆ ಬರಲಿಲ್ಲ. ಏಕೆಂದರೆ ಅವರೆಲ್ಲರೂ ಕುಷ್ಠರೋಗಿಗಳಾಗಿದ್ದರು. 13 ಆದರೆ ಅವರು, “ಯೇಸುವೇ! ಗುರುವೇ! ದಯಮಾಡಿ ನಮಗೆ ಸಹಾಯಮಾಡು!” ಎಂದು ಕೂಗಿಕೊಂಡರು.
14 ಯೇಸು ಅವರನ್ನು ನೋಡಿ, “ಹೋಗಿ, ನಿಮ್ಮನ್ನು ಯಾಜಕರಿಗೆ ತೋರಿಸಿಕೊಳ್ಳಿರಿ” ಎಂದು ಹೇಳಿದನು.
ಅವರು ಯಾಜಕರ ಬಳಿಗೆ ಹೋಗುತ್ತಿದ್ದಾಗ ಅವರಿಗೆ ವಾಸಿಯಾಯಿತು. 15 ಅವರಲ್ಲಿ ಒಬ್ಬನು ತನಗೆ ಗುಣವಾದುದ್ದನ್ನು ಕಂಡು ಯೇಸುವಿನ ಬಳಿಗೆ ಹಿಂತಿರುಗಿ ಬಂದು ಗಟ್ಟಿಯಾದ ಧ್ವನಿಯಿಂದ ದೇವರನ್ನು ಕೊಂಡಾಡಿದನು. 16 ಅವನು ಯೇಸುವಿನ ಪಾದಗಳಿಗೆ ಅಡ್ಡಬಿದ್ದು ಆತನಿಗೆ ವಂದನೆ ಸಲ್ಲಿಸಿದನು. (ಅವನು ಸಮಾರ್ಯದವನು, ಯೆಹೂದ್ಯನಲ್ಲ.) 17 ಯೇಸು, “ಹತ್ತು ಜನರಿಗೆ ವಾಸಿಯಾಯಿತಲ್ಲಾ! ಇನ್ನುಳಿದ ಒಂಭತ್ತು ಮಂದಿ ಎಲ್ಲಿ? 18 ದೇವರಿಗೆ ಕೃತಜ್ಞತೆ ಸಲ್ಲಿಸಲು ಈ ಸಮಾರ್ಯದವನನ್ನು ಬಿಟ್ಟು ಬೇರೆ ಯಾರೂ ಬರಲಿಲ್ಲವೇ?” ಎಂದು ಕೇಳಿದನು. 19 ಬಳಿಕ ಯೇಸು ಅವನಿಗೆ, “ಎದ್ದೇಳು! ಈಗ ನೀನು ಮನೆಗೆ ಹೋಗು! ನೀನು ನಂಬಿದ್ದರಿಂದಲೇ ನಿನಗೆ ವಾಸಿಯಾಯಿತು” ಅಂದನು.
ದೇವರ ರಾಜ್ಯವು ನಿಮ್ಮೊಳಗಿದೆ
(ಮತ್ತಾಯ 24:23-28; 37-41)
20 ಫರಿಸಾಯರಲ್ಲಿ ಕೆಲವರು ಯೇಸುವನ್ನು, “ದೇವರ ರಾಜ್ಯವು ಯಾವಾಗ ಬರುವುದು?” ಎಂದು ಕೇಳಿದರು.
ಯೇಸು ಅವರಿಗೆ, “ದೇವರ ರಾಜ್ಯವು ಬರುತ್ತಿದೆ, ಆದರೆ ನಿಮ್ಮ ಕಣ್ಣುಗಳಿಗೆ ಕಾಣಿಸುವಂತೆ ಅದು ಬರುವುದಿಲ್ಲ. 21 ‘ಇಗೋ, ದೇವರ ರಾಜ್ಯವು ಇಲ್ಲಿದೆ!’ ‘ಅಗೋ ಅಲ್ಲಿದೆ!’ ಎಂದು ಜನರು ಹೇಳುವಂತಿಲ್ಲ. ದೇವರ ರಾಜ್ಯವು ನಿಮ್ಮೊಳಗೇ ಇದೆ” ಎಂದು ಉತ್ತರಿಸಿದನು.
22 ಬಳಿಕ ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನ ದಿನಗಳಲ್ಲೊಂದನ್ನು ನೀವು ನೋಡಬೇಕೆಂದು ಬಹಳವಾಗಿ ಆಶಿಸುವ ಕಾಲವು ಬರುವುದು, ಆದರೆ ನೀವು ಅದನ್ನು ನೋಡಲಾಗುವುದಿಲ್ಲ. 23 ಜನರು ನಿಮಗೆ, ‘ಅಗೋ, ಅಲ್ಲಿದ್ದಾನೆ, ಇಗೋ, ಇಲ್ಲಿದ್ದಾನೆ!’ ಎಂದು ಹೇಳುವರು. ನೀವು ಇದ್ದಲ್ಲಿಯೇ ಇರಿ. ಅವರನ್ನು ಹಿಂಬಾಲಿಸಿ ಹೋಗಿ ಹುಡುಕಬೇಡಿ.
ಯೇಸು ತಿರುಗಿ ಬರುವಾಗ ಲೋಕದ ಸ್ಥಿತಿ
24 “ಮನುಷ್ಯಕುಮಾರನು ಬಂದಾಗ ನಿಮಗೇ ಗೊತ್ತಾಗುವುದು. ಆಕಾಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಹೊಳೆಯುವ ಮಿಂಚಿನಂತೆ ಆತನು ಬರುವನು. 25 ಆದರೆ ಅದಕ್ಕಿಂತಲೂ ಮೊದಲು, ಮನುಷ್ಯಕುಮಾರನು ಅನೇಕ ಸಂಕಟಗಳನ್ನು ಅನುಭವಿಸಿ ಈ ಕಾಲದ ಜನರಿಂದ ತಿರಸ್ಕರಿಸಲ್ಪಡುವನು.
26 “ಮನುಷ್ಯಕುಮಾರನು ತಿರುಗಿ ಬರುವ ದಿವಸಗಳಲ್ಲಿ ಈ ಲೋಕದ ಸ್ಥಿತಿಯು ನೋಹನ ಕಾಲದ ಸ್ಥಿತಿಯಂತೆಯೇ ಇರುವುದು. 27 ನೋಹನ ಕಾಲದಲ್ಲಿ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯನ್ನು ಪ್ರವೇಶಿಸಿದ ದಿನದಲ್ಲಿಯೂ ಅವರು ಹಾಗೆಯೇ ಮಾಡುತ್ತಿದ್ದರು. ಆಗ ಜಲಪ್ರಳಯ ಬಂದು ಎಲ್ಲಾ ಜನರನ್ನು ನಾಶಮಾಡಿತು.
28 “ಲೋಟನ ಕಾಲದಲ್ಲಿ ದೇವರು ಸೊದೋಮನ್ನು ನಾಶಮಾಡಿದಾಗ ಲೋಕದ ಸ್ಥಿತಿಯು ಹೇಗಿತ್ತೋ ಅದೇರೀತಿಯಲ್ಲಿ ಮುಂದೆಯೂ ಇರುವುದು. ಆ ಜನರು ತಿನ್ನುತ್ತಾ, ಕುಡಿಯುತ್ತಾ, ಕೊಂಡುಕೊಳ್ಳುತ್ತಾ, ಮಾರಾಟ ಮಾಡುತ್ತಾ, ಬೀಜ ಬಿತ್ತುತ್ತಾ ಮತ್ತು ತಮಗಾಗಿ ಮನೆಗಳನ್ನು ಕಟ್ಟಿಸಿಕೊಳ್ಳುತ್ತಾ ಇದ್ದರು. 29 ಲೋಟನು ಆ ಪಟ್ಟಣವನ್ನು ಬಿಟ್ಟು ಹೊರಟ ದಿನದಲ್ಲಿಯೂ ಜನರು ಹಾಗೆಯೇ ಮಾಡುತ್ತಿದ್ದರು. ಆಗ ಆಕಾಶದಿಂದ ಬೆಂಕಿಯ ಸುರಿಮಳೆಯಾಗಿ ಅವರೆಲ್ಲರನ್ನೂ ನಾಶಮಾಡಿತು. 30 ಮನುಷ್ಯಕುಮಾರನು ತಿರುಗಿ ಬರುವಾಗ ಲೋಕದ ಸ್ಥಿತಿ ಅದೇ ರೀತಿಯಲ್ಲಿರುವುದು.
31 “ಆ ದಿನದಲ್ಲಿ, ಮಾಳಿಗೆಯ ಮೇಲಿರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳಲು ಹೋಗದಿರಲಿ. ಹೊಲದಲ್ಲಿರುವವನು ತನ್ನ ಮನೆಗೆ ಮರಳಿ ಹೋಗದಿರಲಿ. 32 ಲೋಟನ ಹೆಂಡತಿಗೆ* ಸಂಭವಿಸಿದ್ದು ಜ್ಞಾಪಕವಿದೆಯೇ?
33 “ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಪ್ರಯತ್ನಿಸುವವನು ಅದನ್ನು ಕಳೆದುಕೊಳ್ಳುವನು. ಆದರೆ ತನ್ನ ಪ್ರಾಣವನ್ನು ಕೊಡುವವನು ಅದನ್ನು ಉಳಿಸಿಕೊಳ್ಳುವನು. 34 ನಾನು ತಿರುಗಿ ಬರುವಾಗ ಒಂದೇ ಕೋಣೆಯಲ್ಲಿ ಇಬ್ಬರು ಮಲಗಿದ್ದರೂ ಅವರಲ್ಲಿ ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು. 35 ಇಬ್ಬರು ಸ್ತ್ರೀಯರು ಒಟ್ಟಿಗೆ ಕೆಲಸಮಾಡುತ್ತಿದ್ದರೂ ಅವರಲ್ಲಿ ಒಬ್ಬಳನ್ನು ತೆಗೆದುಕೊಳ್ಳಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು.” 36 
37 ಶಿಷ್ಯರು ಯೇಸುವಿಗೆ, “ಪ್ರಭುವೇ, ಇದೆಲ್ಲಾ ಎಲ್ಲಿ ಸಂಭವಿಸುವುದು?” ಎಂದು ಕೇಳಿದರು.
ಯೇಸು ಅವರಿಗೆ, “ಹದ್ದುಗಳು ಎಲ್ಲಿ ಕೂಡಿಬಂದಿರುತ್ತವೆಯೋ ಅಲ್ಲಿ ಹೆಣ ಇದ್ದೇ ಇರುತ್ತದೆಯೆಂದು ಜನರು ತಿಳಿದುಕೊಳ್ಳುತ್ತಾರೆ” ಎಂದು ಉತ್ತರಿಸಿದನು.
* 17:32 ಲೋಟನ ಹೆಂಡತಿ ಲೋಟನ ಹೆಂಡತಿಗೆ ಸಂಭವಿಸಿದ ಸಂಗತಿಯು ಆದಿಕಾಂಡ 19:15-17, 26ರಲ್ಲಿ ಇದೆ. 17:36 ಲೂಕನ ಸುವಾರ್ತೆಯ ಕೆಲವು ಗ್ರೀಕ್ ಪ್ರತಿಗಳಲ್ಲಿ 36ನೇ ವಚನ ಸೇರಿಸಲ್ಪಟ್ಟಿದೆ: “ಇಬ್ಬರು ಗಂಡಸರು ಒಂದೇ ಹೊಲದಲ್ಲಿರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಆದರೆ ಇನ್ನೊಬ್ಬನು ಬಿಡಲ್ಪಡುವನು.”