4
ಯೇಸುವಿಗೆ ಸೈತಾನನಿಂದಾದ ಶೋಧನೆ
(ಮತ್ತಾಯ 4:1-11; ಮಾರ್ಕ 1:12-13)
ಯೇಸುವು ಜೋರ್ಡನ್ ನದಿಯಿಂದ ಹಿಂತಿರುಗಿದನು. ಆತನು ಪವಿತ್ರಾತ್ಮಭರಿತನಾಗಿದ್ದನು. ಪವಿತ್ರಾತ್ಮನು ಯೇಸುವನ್ನು ಅಡವಿಗೆ ನಡಿಸಿದನು. ಅಲ್ಲಿ ಸೈತಾನನು ಆತನನ್ನು ನಲವತ್ತು ದಿನಗಳವರೆಗೆ ಶೋಧಿಸಿದನು. ಆ ದಿನಗಳಲ್ಲಿ ಯೇಸು ಏನನ್ನೂ ತಿನ್ನಲಿಲ್ಲ. ತರುವಾಯ, ಯೇಸುವಿಗೆ ಬಹಳ ಹಸಿವೆಯಾಯಿತು.
ಆಗ ಸೈತಾನನು ಯೇಸುವಿಗೆ, “ನೀನು ದೇವರ ಮಗನಾಗಿದ್ದರೆ, ಈ ಕಲ್ಲಿಗೆ ರೊಟ್ಟಿಯಾಗು ಎಂದು ಆಜ್ಞಾಪಿಸು” ಎಂದನು.
ಅದಕ್ಕೆ ಯೇಸು,
 
“ ‘ಮನುಷ್ಯನು ರೊಟ್ಟಿ ತಿಂದ ಮಾತ್ರಕ್ಕೆ ಬದುಕುವುದಿಲ್ಲ.’ ಧರ್ಮೋಪದೇಶ. 8:3
ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಉತ್ತರಕೊಟ್ಟನು.
 
ಆಗ ಸೈತಾನನು ಯೇಸುವನ್ನು ಕರೆದುಕೊಂಡು ಹೋಗಿ, ಒಂದೇ ಕ್ಷಣದಲ್ಲಿ ಭೂಲೋಕದ ಎಲ್ಲಾ ರಾಜ್ಯಗಳನ್ನು ತೋರಿಸಿ, “ಈ ರಾಜ್ಯಗಳೆಲ್ಲವನ್ನೂ ಇವುಗಳ ಸರ್ವಾಧಿಕಾರವನ್ನೂ ವೈಭವವನ್ನೂ ನಿನಗೆ ಕೊಡುತ್ತೇನೆ. ಇವುಗಳೆಲ್ಲಾ ನನ್ನ ಅಧೀನದಲ್ಲಿವೆ. ನಾನು ಯಾರಿಗೆ ಬೇಕಾದರೂ ಇವುಗಳನ್ನು ಕೊಡಬಲ್ಲೆ. ನೀನು ನನ್ನನ್ನು ಆರಾಧಿಸುವುದಾದರೆ ಇವೆಲ್ಲವನ್ನು ನಾನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.
ಅದಕ್ಕೆ ಯೇಸು,
 
“ ‘ನಿನ್ನ ಪ್ರಭುವಾದ ದೇವರೊಬ್ಬನನ್ನೇ ಆರಾಧಿಸಬೇಕು,
ಆತನೊಬ್ಬನಿಗೇ ಸೇವೆಮಾಡಬೇಕು’ ಧರ್ಮೋಪದೇಶ. 6:13
ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದಿದೆ!” ಎಂದನು.
 
ಬಳಿಕ ಸೈತಾನನು ಯೇಸುವನ್ನು ಜೆರುಸಲೇಮಿಗೆ ಕರೆದೊಯ್ದು, ದೇವಾಲಯದ ಬಹು ಎತ್ತರವಾದ ಸ್ಥಳದಲ್ಲಿ ನಿಲ್ಲಿಸಿ, “ನೀನು ದೇವರ ಮಗನಾಗಿದ್ದರೆ, ಕೆಳಕ್ಕೆ ಧುಮುಕು!
 
10 ‘ದೇವರು ನಿನ್ನನ್ನು ಕಾಪಾಡುವುದಕ್ಕೆ ತನ್ನ ದೂತರಿಗೆ ಅಪ್ಪಣೆಕೊಡುವನು.’ ಕೀರ್ತನೆ. 91:1
 
11 ‘ನಿನ್ನ ಪಾದವು ಕಲ್ಲಿಗೆ ತಗಲೀತೆಂದು
ಅವರು ತಮ್ಮ ಕೈಗಳಿಂದ ನಿನ್ನನ್ನು ಎತ್ತಿಕೊಳ್ಳುವರು’ ಕೀರ್ತನೆ. 91:12
ಎಂಬುದಾಗಿ ಶಾಸ್ತ್ರದಲ್ಲಿ ಬರೆದಿದೆ” ಎಂದನು.
 
12 ಅದಕ್ಕೆ ಯೇಸು,
 
“ ‘ನಿನ್ನ ಪ್ರಭುವಾದ ದೇವರನ್ನು ಪರೀಕ್ಷಿಸಬಾರದು’ ಧರ್ಮೋಪದೇಶ. 6:16
ಎಂಬುದಾಗಿಯೂ ಬರೆದಿದೆ” ಎಂದು ಉತ್ತರಿಸಿದನು.
 
13 ಸೈತಾನನು ಯೇಸುವನ್ನು ನಾನಾ ವಿಧದಲ್ಲಿ ಶೋಧಿಸಿದ ನಂತರ, ತಕ್ಕಕಾಲ ಬರುವ ತನಕ ಆತನನ್ನು ಬಿಟ್ಟುಹೋದನು.
ಜನರಿಗೆ ಯೇಸುವಿನ ಉಪದೇಶ
(ಮತ್ತಾಯ 4:12-17; ಮಾರ್ಕ 1:14-15)
14 ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿ ಹೋದನು. ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿರುವ ಪ್ರದೇಶದಲ್ಲೆಲ್ಲಾ ಹಬ್ಬಿತು. 15 ಯೇಸು ಸಭಾಮಂದಿರಗಳಲ್ಲಿ ಉಪದೇಶಿಸಲು ಪ್ರಾರಂಭಿಸಿದನು. ಜನರೆಲ್ಲರೂ ಆತನನ್ನು ಹೊಗಳಿದರು.
ಯೇಸು ಸ್ವಂತ ನಾಡಿಗೆ ಬಂದದ್ದು
(ಮತ್ತಾಯ 13:53-58; ಮಾರ್ಕ 6:1-6)
16 ಯೇಸು ತಾನು ಬೆಳೆದ ನಜರೇತ್ ಎಂಬ ಊರಿಗೆ ಪ್ರಯಾಣ ಮಾಡಿದನು. ವಾಡಿಕೆಯ ಪ್ರಕಾರ, ಆತನು ಸಬ್ಬತ್‌ದಿನದಲ್ಲಿ ಸಭಾಮಂದಿರಕ್ಕೆ ಹೋದನು. ಯೇಸು ಓದುವುದಕ್ಕಾಗಿ ಎದ್ದುನಿಂತನು. 17 ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಆತನಿಗೆ ಓದಲು ಕೊಡಲಾಗಿತ್ತು. ಯೇಸು ಆ ಪುಸ್ತಕವನ್ನು ತೆರೆದು ಈ ಭಾಗವನ್ನು ಓದಿದನು:
 
18 “ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ.
ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ.
ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ
ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ
ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ.
ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ
19 ಪ್ರಭುವಿನ ಶುಭವರ್ಷವನ್ನು ಪ್ರಕಟಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾನೆ.” ಯೆಶಾಯ 61:1-2
 
20 ಈ ಭಾಗವನ್ನು ಓದಿದ ನಂತರ ಯೇಸು ಆ ಪುಸ್ತಕವನ್ನು ಮುಚ್ಚಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಸಭಾಮಂದಿರದಲ್ಲಿದ್ದ ಪ್ರತಿಯೊಬ್ಬರು ಯೇಸುವನ್ನೇ ದೃಷ್ಟಿಸಿ ನೋಡುತ್ತಿದ್ದರು. 21 ಆಗ ಯೇಸು, ಅವರಿಗೆ, “ನಾನು ಇದೀಗ ಓದಿದ ಮಾತುಗಳನ್ನು ನೀವು ಕೇಳುತ್ತಿದ್ದಾಗಲೇ ಅವು ನಿಜವಾಗಿ ನೆರವೇರಿದವು!” ಎಂದು ಹೇಳಿದನು.
22 ಜನರೆಲ್ಲರೂ ಯೇಸುವನ್ನು ಹೊಗಳತೊಡಗಿದರು. ಅವರು ಆತನ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಈ ರೀತಿ ಮಾತಾಡಲು ಹೇಗೆ ಸಾಧ್ಯ? ಇವನು ಯೋಸೇಫನ ಮಗನಲ್ಲವೇ?” ಎಂದು ಮಾತಾಡಿಕೊಂಡರು.
23 ಯೇಸು ಅವರಿಗೆ, “ನೀವಂತೂ ‘ವೈದ್ಯನೇ, ನಿನ್ನನ್ನೇ ವಾಸಿಮಾಡಿಕೊ’ ಎಂಬ ಗಾದೆಯನ್ನು ನನಗೆ ಹೇಳುತ್ತೀರಿ ಎಂಬುದು ನನಗೆ ಗೊತ್ತು. ‘ನೀನು ಕಪೆರ್ನೌಮಿನಲ್ಲಿ ಮಾಡಿದ ಕೆಲವು ಕಾರ್ಯಗಳ ಬಗ್ಗೆ ನಾವು ಕೇಳಿದ್ದೇವೆ. ಅದೇ ಕಾರ್ಯಗಳನ್ನು ನಿನ್ನ ಸ್ವಂತ ಊರಿನಲ್ಲಿ ಮಾಡು!’ ” ಎಂದು ಹೇಳಬೇಕೆಂದಿದ್ದೀರಿ. 24 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪ್ರವಾದಿ ತನ್ನ ಸ್ವಂತ ಊರಿನಲ್ಲಿ ಸ್ವೀಕೃತನಾಗುವುದಿಲ್ಲ.
25 “ನಾನು ಹೇಳುವುದು ಸತ್ಯ. ಎಲೀಯನ ಕಾಲದಲ್ಲಿ ಮೂರುವರೆ ವರ್ಷಗಳವರೆಗೆ ಇಸ್ರೇಲ್ ದೇಶದಲ್ಲಿ ಮಳೆ ಬೀಳಲಿಲ್ಲ. ದೇಶದ ಯಾವ ಕಡೆಯಲ್ಲಿಯೂ ಆಹಾರವಿರಲಿಲ್ಲ. ಆ ಸಮಯದಲ್ಲಿ ಇಸ್ರೇಲಿನಲ್ಲಿ ಅನೇಕ ವಿಧವೆಯರು ಇದ್ದರು. 26 ಆದರೆ ಎಲೀಯನನ್ನು ಬೇರೆ ಯಾವ ವಿಧವೆಯರ ಬಳಿಗೂ ಕಳುಹಿಸದೆ ಸಿದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳುಹಿಸಲಾಯಿತು.
27 “ಪ್ರವಾದಿಯಾದ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರೇಲಿನಲ್ಲಿ ವಾಸಿಸುತ್ತಿದ್ದರು. ಆದರೆ ಅವರಲ್ಲಿ ಯಾರಿಗೂ ವಾಸಿಯಾಗದೆ ಸಿರಿಯ ದೇಶದ ನಾಮಾನನೊಬ್ಬನಿಗೇ ವಾಸಿಯಾಯಿತು” ಎಂದು ಹೇಳಿದನು.
28 ಸಭಾಮಂದಿರದಲ್ಲಿದ್ದ ಜನರೆಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಕೋಪಗೊಂಡು 29 ಯೇಸುವನ್ನು ಪಟ್ಟಣದಿಂದ ಹೊರಗಟ್ಟಿದರು. ಆ ಪಟ್ಟಣವು ಒಂದು ಗುಡ್ಡದ ಮೇಲಿತ್ತು. ಅವರು ಯೇಸುವನ್ನು ಗುಡ್ಡದ ಅಂಚಿಗೆ ಕರೆದುಕೊಂಡು ಬಂದು ಕೆಳಕ್ಕೆ ತಳ್ಳಿಬಿಡಬೇಕೆಂದಿದ್ದರು. 30 ಆದರೆ ಯೇಸು ಅವರ ಮಧ್ಯದಲ್ಲಿ ಹಾದು ಹೊರಟುಹೋದನು.
ದೆವ್ವದಿಂದ ಪೀಡಿತನಾಗಿದ್ದವನಿಗೆ ಬಿಡುಗಡೆ
(ಮಾರ್ಕ 1:21-28)
31 ಯೇಸು ಗಲಿಲಾಯದ ಕಪೆರ್ನೌಮ್ ಎಂಬ ಊರಿಗೆ ಹೋದನು. ಸಬ್ಬತ್‌ದಿನದಂದು ಯೇಸು ಜನರಿಗೆ ಉಪದೇಶಿಸಿದನು. 32 ಯೇಸುವಿನ ಉಪದೇಶಕ್ಕೆ ಅವರು ಅತ್ಯಾಶ್ಚರ್ಯಪಟ್ಟರು. ಏಕೆಂದರೆ ಆತನು ಅಧಿಕಾರದಿಂದ ಮಾತಾಡಿದನು.
33 ಸಭಾಮಂದಿರದಲ್ಲಿ ದೆವ್ವದಿಂದ ಪೀಡಿತನಾದ ಒಬ್ಬ ಮನುಷ್ಯನಿದ್ದನು. ಅವನು ಗಟ್ಟಿಯಾದ ಧ್ವನಿಯಿಂದ, 34 “ನಜರೇತಿನ ಯೇಸುವೇ! ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡಲು ಇಲ್ಲಿಗೆ ಬಂದಿರುವೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಕಳುಹಿಸಲ್ಪಟ್ಟ ಪರಿಶುದ್ಧನು!” ಎಂದು ಕೂಗಿದನು. 35 ಆದರೆ ಯೇಸು ಆ ದೆವ್ವಕ್ಕೆ, “ಸುಮ್ಮನಿರು! ಇವನನ್ನು ಬಿಟ್ಟು ಹೊರಗೆ ಬಾ!” ಎಂದು ಆಜ್ಞಾಪಿಸಿದನು. ದೆವ್ವವು ಅವನನ್ನು ಜನರೆಲ್ಲರ ಎದುರಿನಲ್ಲಿಯೇ ಕೆಡವಿ ಯಾವ ಕೇಡೂ ಮಾಡದೆ ಬಿಟ್ಟು ಹೋಯಿತು.
36 ಜನರೆಲ್ಲರೂ ಬೆರಗಾಗಿ, “ಎಂಥಾ ಮಾತುಗಳಿವು! ಆತನು ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಆಜ್ಞಾಪಿಸಲು, ಅವು ಬಿಟ್ಟುಹೋಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು. 37 ಹೀಗಾಗಿ ಯೇಸುವಿನ ಸುದ್ದಿಯು ಆ ಪ್ರಾಂತ್ಯದಲ್ಲೆಲ್ಲಾ ಹಬ್ಬಿಕೊಂಡಿತು.
ಯೇಸುವಿನಿಂದ ಗುಣಹೊಂದಿದ ಸ್ತ್ರೀ
(ಮತ್ತಾಯ 8:14-17; ಮಾರ್ಕ 1:29-34)
38 ಯೇಸು ಸಭಾಮಂದಿರದಿಂದ ಹೊರಟು ಸೀಮೋನನ* ಮನೆಗೆ ಹೋದನು. ಸೀಮೋನನ ಅತ್ತೆ ಬಹಳ ಜ್ವರದಿಂದ ನರಳುತ್ತಿದ್ದಳು. ಆಕೆಗೆ ಸಹಾಯ ಮಾಡಬೇಕೆಂದು ಅಲ್ಲಿದ್ದವರು ಆತನನ್ನು ಬೇಡಿಕೊಂಡರು. 39 ಯೇಸು ಆಕೆಯ ಬಳಿ ನಿಂತು, ಆಕೆಯನ್ನು ಬಿಟ್ಟುಹೋಗುವಂತೆ ಜ್ವರಕ್ಕೆ ಆಜ್ಞಾಪಿಸಿದನು. ಆ ಕೂಡಲೇ ಆಕೆಗೆ ಗುಣವಾಯಿತು. ಆಕೆ ಎದ್ದು ಅವರನ್ನು ಉಪಚರಿಸಿದಳು.
ಅನೇಕರಿಗೆ ಆರೋಗ್ಯದಾನ
40 ಸೂರ್ಯನು ಮುಳುಗಿದ ಮೇಲೆ, ಅಸ್ವಸ್ಥರಾದ ತಮ್ಮ ಸ್ನೇಹಿತರನ್ನು ಜನರು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಅವರಿಗೆ ಅನೇಕ ತರಹದ ಕಾಯಿಲೆಗಳಿದ್ದವು. ಪ್ರತಿಯೊಬ್ಬ ರೋಗಿಯ ಮೇಲೂ ಯೇಸು ತನ್ನ ಕೈಯನ್ನಿಟ್ಟು ಗುಣಪಡಿಸಿದನು. 41 ಅನೇಕ ಜನರೊಳಗಿಂದ ದೆವ್ವಗಳು, “ನೀನು ದೇವಕುಮಾರ” ಎಂದು ಆರ್ಭಟಿಸುತ್ತಾ ಬಿಟ್ಟುಹೋದವು. ಆದರೆ ಯೇಸು ಆ ದೆವ್ವಗಳಿಗೆ, “ಮಾತಾಡಕೂಡದೆಂದು” ಬಲವಾಗಿ ಆಜ್ಞಾಪಿಸಿದನು. ಯೇಸುವೇ “ಕ್ರಿಸ್ತ”ನೆಂದು ದೆವ್ವಗಳಿಗೆ ತಿಳಿದಿತ್ತು.
ಇತರ ಊರುಗಳಿಗೆ ಯೇಸುವಿನ ಸಂದರ್ಶನ
(ಮಾರ್ಕ 1:35-39)
42 ಮರುದಿನ ಯೇಸು ನಿರ್ಜನ ಸ್ಥಳಕ್ಕೆ ಹೋದನು. ಜನರು ಯೇಸುವಿಗಾಗಿ ಹುಡುಕುತ್ತಾ ಅಲ್ಲಿಗೆ ಬಂದು, ತಮ್ಮನ್ನು ಬಿಟ್ಟುಹೋಗದಂತೆ ಆತನನ್ನು ತಡೆಯಲು ಪ್ರಯತ್ನಿಸಿದರು. 43 ಆದರೆ ಯೇಸು ಅವರಿಗೆ, “ನಾನು ಬೇರೆ ಊರುಗಳವರಿಗೂ ಸಹ ದೇವರ ರಾಜ್ಯದ ಸುವಾರ್ತೆಯನ್ನು ತಿಳಿಸಬೇಕು. ಇದಕ್ಕಾಗಿಯೇ ನನ್ನನ್ನು ಕಳುಹಿಸಲಾಗಿದೆ” ಎಂದು ಹೇಳಿದನು.
44 ಬಳಿಕ ಯೇಸು ಜುದೇಯದ ಸಭಾಮಂದಿರಗಳಲ್ಲಿ ಬೋಧಿಸಿದನು.
* 4:38 ಸೀಮೋನ ಸೀಮೋನನ ಇನ್ನೊಂದು ಹೆಸರು ಪೇತ್ರ.