ಜ್ಞಾನೋಕ್ತಿಗಳು
1
ಮುನ್ನುಡಿ
ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು. ಸೊಲೊಮೋನನು ಇಸ್ರೇಲರ ರಾಜನಾಗಿದ್ದನು. ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದುಕೊಳ್ಳುವುದಕ್ಕೂ ಬುದ್ಧಿವಾದವನ್ನು ಗ್ರಹಿಸಿಕೊಳ್ಳುವುದಕ್ಕೂ ಈ ಜ್ಞಾನೋಕ್ತಿಗಳು ಸಹಾಯಕವಾಗಿವೆ. ಈ ಜ್ಞಾನೋಕ್ತಿಗಳು ಯೋಗ್ಯವಾರ್ಗದಲ್ಲಿ ಜೀವಿಸಲು ಅಂದರೆ ಯಥಾರ್ಥವಾಗಿಯೂ ನ್ಯಾಯವಾಗಿಯೂ ಮತ್ತು ಒಳ್ಳೆಯವರಾಗಿಯೂ ಇರಲು ಉಪದೇಶಿಸುತ್ತವೆ. ಈ ಜ್ಞಾನೋಕ್ತಿಗಳು ಸಾಮಾನ್ಯರಿಗೆ ಜಾಣತನವನ್ನು ಯೌವನಸ್ಥರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುತ್ತವೆ. ಈ ಜ್ಞಾನೋಕ್ತಿಗಳಿಗೆ ಕಿವಿಗೊಡುವುದರ ಮೂಲಕ ಜ್ಞಾನಿಗಳು ತಮ್ಮ ಪಾಂಡಿತ್ಯವನ್ನೂ ವಿವೇಕಿಗಳು ತಮ್ಮ ಉಚಿತಾಲೋಚನೆಗಳನ್ನೂ ಹೆಚ್ಚಿಸಿಕೊಳ್ಳಲಿ. ಆಗ ಅವರು ಗಾದೆಗಳನ್ನು, ಸಾಮತಿಗಳನ್ನು, ಜ್ಞಾನದ ನುಡಿಗಳನ್ನು ಮತ್ತು ಒಗಟುಗಳನ್ನು ಅರ್ಥಮಾಡಿಕೊಳ್ಳುವರು.
ಯೆಹೋವನಲ್ಲಿಟ್ಟಿರುವ ಭಯಭಕ್ತಿಯೇ ಜ್ಞಾನದ ಮೂಲ. ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ದ್ವೇಷಿಸುವರು.
ಸೊಲೊಮೋನನು ತನ್ನ ಮಗನಿಗೆ ಮಾಡಿದ ಉಪದೇಶ
ನನ್ನ ಮಗನೇ, ನಿನ್ನ ತಂದೆಯ ಬುದ್ಧಿಮಾತಿಗೆ ಕಿವಿಗೊಡು; ನಿನ್ನ ತಾಯಿಯ ಉಪದೇಶವನ್ನು ಅಲಕ್ಷಿಸಬೇಡ. ನಿನ್ನ ತಂದೆತಾಯಿಗಳ ಮಾತುಗಳು ನಿನ್ನ ತಲೆಗೆ ಸುಂದರವಾದ ಹೂವಿನ ಕಿರೀಟದಂತೆಯೂ ನಿನ್ನ ಕೊರಳಿಗೆ ಸುಂದರವಾದ ಹಾರದಂತೆಯೂ ಇವೆ.
10 ನನ್ನ ಮಗನೇ, ಪಾಪ ಮಾಡಬಯಸುವವರು ನಿನಗೆ ದುಪ್ರೇರಣೆ ಮಾಡಿದರೆ ಅವರನ್ನು ಹಿಂಬಾಲಿಸಕೂಡದು. 11 ನಿನಗೆ, “ನಮ್ಮ ಜೊತೆ ಬಾ! ನಾವು ಅಲ್ಲಿ ಅವಿತುಕೊಂಡಿದ್ದು ಯಾರನ್ನಾದರೂ ಕೊಲೆ ಮಾಡೋಣ; ಕೆಲವು ನಿರಪರಾಧಿಗಳ ಮೇಲೆ ನಿಷ್ಕಾರಣವಾಗಿ ಆಕ್ರಮಣ ಮಾಡಿ 12 ಅವರನ್ನು ಜೀವಂತವಾಗಿ ನುಂಗೋಣ; ಪಾತಾಳವು ನುಂಗುವಂತೆ ಸಂಪೂರ್ಣವಾಗಿ ನುಂಗಿಬಿಡೋಣ. 13 ಬೆಲೆಬಾಳುವ ಎಲ್ಲಾ ಬಗೆಯ ವಸ್ತುಗಳನ್ನು ಕದ್ದು ನಮ್ಮ ಮನೆಗಳಲ್ಲಿ ತುಂಬಿಸಿಕೊಳ್ಳೋಣ. 14 ಅವುಗಳಲ್ಲಿ ನಿನಗೆ ಸಮಪಾಲು ದೊರೆಯುವುದು, ಬಂದು ನಮ್ಮೊಂದಿಗೆ ಸೇರಿಕೊ” ಎಂದು ಆ ಪಾಪಿಗಳು ಹೇಳಬಹುದು.
15 ನನ್ನ ಮಗನೇ, ಅವರ ಜೀವಿತವನ್ನು ಅನುಸರಿಸಬೇಡ. ಅವರ ಜೀವಿತಮಾರ್ಗದಲ್ಲಿ ಮೊದಲನೆ ಹೆಜ್ಜೆಯನ್ನೂ ಇಡಬೇಡ. 16 ಅವರು ಕೇಡುಮಾಡುವುದಕ್ಕೆ ಯಾವಾಗಲೂ ಸಿದ್ಧರಾಗಿದ್ದಾರೆ. ಜನರನ್ನು ಕೊಲ್ಲುವುದಕ್ಕೆ ಯಾವಾಗಲೂ ಆತುರಪಡುತ್ತಾರೆ.
17 ಪಕ್ಷಿಗಳ ಕಣ್ಣೆದುರಿನಲ್ಲಿ ಬಲೆಹಾಕುವುದರಿಂದ ಪ್ರಯೋಜನವೇನೂ ಇಲ್ಲ. 18 ಅವರಾದರೋ ಬೇರೊಬ್ಬನನ್ನು ಕೊಲ್ಲಲು ಅವಿತುಕೊಂಡು ಕಾಯುತ್ತಾರೆ; ಆದರೆ ಅವರು ತಮ್ಮ ಸಂಚಿನಿಂದ ತಮ್ಮನ್ನೇ ನಾಶಪಡಿಸಿಕೊಳ್ಳುತ್ತಾರೆ. 19 ದುರಾಶೆಯುಳ್ಳವರು ತಾವು ದೋಚಿಕೊಳ್ಳುವ ವಸ್ತುಗಳಿಂದಲೇ ನಾಶವಾಗುವರು.
ಜ್ಞಾನವೆಂಬಾಕೆ
20 ಜ್ಞಾನವು ಬೀದಿಗಳಲ್ಲಿ ಕೂಗುವ ಸ್ತ್ರೀಯಂತಿದೆ. ಆಕೆಯು ಬಹಿರಂಗ ಸ್ಥಳಗಳಲ್ಲಿ ಕೂಗಿ ಕರೆಯುತ್ತಾಳೆ. 21 ಆಕೆಯು ಜನಸಂದಣಿಯ ರಸ್ತೆಚೌಕಗಳಲ್ಲಿ ಕರೆಯುತ್ತಾಳೆ. ಪಟ್ಟಣದ ಬಾಗಿಲುಗಳ ಬಳಿಯಲ್ಲಿ ಆಕೆಯು ಜನರೊಂದಿಗೆ ಮಾತಾಡುತ್ತಾಳೆ:
22 “ನೀವು ಮೂಢಜನರು. ಇನ್ನೆಷ್ಟುಕಾಲ ನೀವು ನಿಮ್ಮ ಮೂಢತನದಲ್ಲಿ ಆನಂದಿಸುವಿರಿ? ಇನ್ನೆಷ್ಟುಕಾಲ ನೀವು ವಿವೇಕವನ್ನು ಹಾಸ್ಯಮಾಡಬೇಕೆಂದಿದ್ದೀರಿ? ಇನ್ನೆಷ್ಟುಕಾಲ ನೀವು ಜ್ಞಾನವನ್ನು ದ್ವೇಷ ಮಾಡಬೇಕೆಂದಿದ್ದೀರಿ? 23 ನೀವು ನನ್ನ ಗದರಿಕೆಗೆ ಕಿವಿಗೊಟ್ಟರೆ, ನನ್ನ ಮನಸ್ಸಿನಲ್ಲಿರುವುದನ್ನೆಲ್ಲ ತಿಳಿಸುವೆನು; ನನ್ನ ಆಲೋಚನೆಗಳನ್ನು ನಿಮಗೆ ಗೊತ್ತುಪಡಿಸುವೆನು.
24 “ಆದರೆ ನೀವು ನನಗೆ ಗಮನಕೊಡಲಿಲ್ಲ. ನಾನು ಸಹಾಯಮಾಡಲು ಪ್ರಯತ್ನಿಸಿದೆ. ನಾನು ಕೈಚಾಚಿದೆ; ಆದರೆ ನೀವು ನನ್ನ ಸಹಾಯವನ್ನು ತೆಗೆದುಕೊಳ್ಳದೆ ತಿರಸ್ಕರಿಸಿದಿರಿ. 25 ನೀವು ನನಗೆ ಮುಖ ತಿರುವಿಕೊಂಡಿರಿ; ನನ್ನ ಸಲಹೆಗಳನ್ನೆಲ್ಲ ಕಡೆಗಣಿಸಿದಿರಿ; ನನ್ನ ತಿದ್ದುಪಾಟನ್ನು ತಿರಸ್ಕರಿಸಿದಿರಿ. 26 ಆದ್ದರಿಂದ ನಿಮ್ಮ ಕಷ್ಟದಲ್ಲಿ ನಾನು ನಗುವೆನು; ಅಪಾಯವು ನಿಮಗೆ ಬಡಿಯುವಾಗ ನಿಮ್ಮನ್ನು ಗೇಲಿ ಮಾಡುವೆನು. 27 ಮಹಾ ಸಂಕಷ್ಟವು ಕೆಟ್ಟ ಬಿರುಗಾಳಿಯಂತೆ ನಿಮಗೆ ಬರುವುದು. ತೊಂದರೆಗಳು ಬಲವಾದ ಗಾಳಿಯಂತೆ ನಿಮಗೆ ಬಡಿಯುವುದು. ನಿಮ್ಮ ಕಷ್ಟಗಳು ಮತ್ತು ದುಃಖಗಳು ನಿಮ್ಮ ಮೇಲೆ ಬಹು ಭಾರವಾಗಿರುತ್ತವೆ.
28 “ಇವೆಲ್ಲಾ ನಿಮಗೆ ಸಂಭವಿಸುವಾಗ ನೀವು ಸಹಾಯಕ್ಕಾಗಿ ನನ್ನನ್ನು ಕೇಳುವಿರಿ; ಆದರೆ ನಾನು ನಿಮಗೆ ಸಹಾಯ ಮಾಡುವುದಿಲ್ಲ. ನೀವು ನನಗಾಗಿ ಹುಡುಕುವಿರಿ. ಆದರೆ ನಾನು ನಿಮಗೆ ಸಿಕ್ಕುವುದಿಲ್ಲ. 29 ನಾನು ನಿಮಗೆ ಸಹಾಯ ಮಾಡುವುದಿಲ್ಲ; ಏಕೆಂದರೆ ನೀವೆಂದೂ ನನ್ನ ಜ್ಞಾನವನ್ನು ಬಯಸಲಿಲ್ಲ. ನೀವು ಯೆಹೋವನಲ್ಲಿ ಭಯಭಕ್ತಿಯಿಂದಿರಲು ನಿರ್ಧರಿಸಲಿಲ್ಲ. 30 ನೀವು ನನ್ನ ಗದರಿಕೆಯ ಮಾತುಗಳನ್ನು ತಿರಸ್ಕರಿಸಿದಿರಿ. ನಾನು ನಿಮಗೆ ಸರಿಯಾದ ದಾರಿಯನ್ನು ತೋರಿಸಿದಾಗ ನೀವು ನನಗೆ ಕಿವಿಗೊಡಲಿಲ್ಲ. 31 ಆದ್ದರಿಂದ ನೀವು ನಿಮ್ಮ ದುಷ್ಟನಡತೆಯ ಫಲಗಳನ್ನು ಅನುಭವಿಸುವಿರಿ. ನೀವು ಬೇರೆಯವರಿಗೆ ಮಾಡಿದ ಕುಯುಕ್ತಿಗಳನ್ನೇ ಹೊಂದುವಿರಿ.
32 “ಮೂಢರು ಜ್ಞಾನವನ್ನು ತಿರಸ್ಕರಿಸುವುದರಿಂದ ಸಾವಿಗೀಡಾಗುವರು; ಅವರ ಉದಾಸೀನತೆಯೇ ಅವರನ್ನು ನಾಶಪಡಿಸುವುದು. 33 ಆದರೆ ನನಗೆ ವಿಧೇಯನಾಗುವವನು ಕ್ಷೇಮವಾಗಿಯೂ ಸುಖವಾಗಿಯೂ ಬದುಕುವನು. ಅವನು ಅಪಾಯಕ್ಕೆ ಭಯಪಡುವ ಅವಶ್ಯವಿಲ್ಲ.”