15
ಪ್ರಯೋಜನಕ್ಕೆ ಬಾರದ ದ್ರಾಕ್ಷಾಲತೆಯ ಸಾಮ್ಯ
ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, “ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು? ಜನರು ದ್ರಾಕ್ಷಿಯ ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವ ವಸ್ತುವನ್ನಾದರೂ ನೇತು ಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ? ಇಲ್ಲ, ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ. ಅದು ಸಂಪೂರ್ಣವಾಗಿ ಇದ್ದಾಗ ಯಾವ ಕೆಲಸಕ್ಕೂ ಬರಲಿಲ್ಲ; ಬೆಂಕಿಯಲ್ಲಿ ಸುಟ್ಟು ಇದ್ದಲಾದ ಮೇಲೆ ಯಾವ ಕೆಲಸಕ್ಕೆ ಬಂದೀತು?”
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವನ ವೃಕ್ಷಗಳಲ್ಲಿ ದ್ರಾಕ್ಷಿಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯನ್ನಾಗಿ ಕೊಟ್ಟಿದ್ದೇನೋ, ಹಾಗೆಯೇ ನಾನು ಯೆರೂಸಲೇಮಿನವರನ್ನು ವಿನಾಶಕ್ಕೆ ಗುರಿಮಾಡಿದ್ದೇನೆ. ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು. ಅವರು ದ್ರೋಹ ಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.